ಹೊಸಪೇಟೆ (ವಿಜಯನಗರ): ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಯನ್ನು ಸೃಷ್ಟಿಸಿ ವಿವಿಗೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುವಂತೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಎಸ್ಎಫ್ಐ ವಿಜಯನಗರ ಜಿಲ್ಲಾ ಸಮಿತಿಯಿಂದ ಮಂಗಳವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಮನವಿ ಪತ್ರ ಕಳುಹಿಸಿದರು.
ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಮಾತನಾಡಿ, ‘ನಕಲಿ ಸಹಿಯಿಂದ ಒಟ್ಟು 3,330 ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ಹಂಚಲಾಗಿದೆ. ಮತ್ತು ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ವಿದ್ಯಾರ್ಥಿಗಳಿಂದ ಕನಿಷ್ಠ ₹8 ಸಾವಿರ ಸಂಗ್ರಹಣೆ ಮಾಡಿದ್ದಾರೆ’ ಎಂದು ಆರೋಪಿಸಿದರು.
‘ಇದೇ ಫೆಬ್ರವರಿಯಲ್ಲಿ ಘಟಿಕೋತ್ಸವ ಪ್ರಮಾಣ ಪತ್ರ ಹಗರಣವು ಬೆಳಕಿಗೆ ಬಂದಿದ್ದು, ಇಲ್ಲಿವರೆಗೂ ಯಾವುದೇ ಕಾನೂನು ಕ್ರಮ ಜರುಗಿಸದೇ ಇರುವುದು ಖಂಡನೀಯ. ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ವಿಶ್ವವಿದ್ಯಾಲಯದ ಬೊಕ್ಕಸಕ್ಕೂ ಕೋಟಿಗಟ್ಟಲೆ ಹಣ ನಷ್ಟವಾಗಿದೆ. ಆದ್ದರಿಂದ ಇದರ ಹಿಂದೆ ಇರುವವರ ಜಾಲ ಕೂಡಲೆ ಪತ್ತೆ ಮಾಡಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
ಸಮಿತಿ ವಿರೇಶ್ ರಾಠೋಡ್, ಮಹಾಲಿಂಗ, ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.