ADVERTISEMENT

₹2.5 ಕೋಟಿ ವೆಚ್ಚದಲ್ಲಿ ಉಚ್ಚಂಗಿ ದುರ್ಗದಲ್ಲಿ ಅಭಿವೃದ್ಧಿ ಕಾರ್ಯ: ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 19:30 IST
Last Updated 8 ಆಗಸ್ಟ್ 2022, 19:30 IST
ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ   

ಹರಪನಹಳ್ಳಿ (ವಿಜಯನಗರ ಜಿಲ್ಲೆ): ₹2.5 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಡಿ.ಪಿ.ಆರ್ತಯಾರಿಸಲು ಸೂಚಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಹರಪನಹಳ್ಳಿ ಯಲ್ಲಿ ರಾಜ್ಯ ಬಿಜೆಪಿ ಒ.ಬಿ.ಸಿ. ಮೋರ್ಚಾದ ಪ್ರಶಿಕ್ಷಣ ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಉಚ್ಚಂಗಿ ದುರ್ಗದಲ್ಲಿ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದೈವ ಸಂಕಲ್ಪ ಯೋಜನೆಯಲ್ಲಿ ಅದನ್ನು ಸೇರಿಸಲಾಗಿದೆ. ಎರಡನೇ ಪಟ್ಟಿಯಲ್ಲಿ ಈ ಬಗ್ಗೆ ಪ್ರಕಟಿಸಲಾಗುವುದು. ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ₹2.5 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಈ ಬಗ್ಗೆ ವಿಸ್ತೃತ ಯೋಜನೆಯನ್ನು ರಚಿಸುವಂತೆ ಜಿಲ್ಲಾಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದರು.

ADVERTISEMENT

ಯಾತ್ರಾರ್ಥಿಗಳಿಗೆ ಬೆಟ್ಟ ಹತ್ತುವ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆ ಎದುರಾದರೆ ಚಿಕಿತ್ಸೆ ಪಡೆದುಕೊಳ್ಳಲು ತೊಂದರೆ ಇದ್ದು, ನರ್ಸ್ ಗಳನ್ನು ನೇಮಿಸುವಂತೆ ವಿನಂತಿಸಿದ್ದಾರೆ. ಈ ಬಗ್ಗೆ ಶೀಘ್ರ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ವಸತಿ ಗೃಹ ನಿರ್ಮಾಣಕ್ಕೆ ಅಗತ್ಯವಿರುವ 2 ಎಕರೆ ಭೂಮಿಯನ್ನು ದೇವಸ್ಥಾನ ಕ್ಕೆ ನೀಡಲು ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಈಗಾಗಲೇ ಅನುಮತಿ ಪಡೆದುಕೊಳ್ಳಲಾಗಿದೆ. ಆದಷ್ಟು ಶೀಘ್ರ ಕಾಮಗಾರಿಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಮುಜರಾಯಿ ಇಲಾಖೆಗೆ ಸೇರಿದ 'ಸಿ' ದರ್ಜೆ ದೇವಸ್ಥಾನಗಳು ಪುರಾತನ ವಾಗಿದ್ದು, ಶಿಥಿಲವಾಗಿವೆ. ಇವುಗಳ ಜೀರ್ಣೋದ್ಧಾರಕ್ಕಾಗಿ ಕಾಯಕಲ್ಪ ಯೋಜನೆಯನ್ನು ಪ್ರಾರಂಭಿಸಿದ್ದು, ಜಿಲ್ಲಾಧಿಕಾರಿಗಳಿಂದ ಪಟ್ಟಿಯನ್ನು ಪಡೆದುಕೊಳ್ಳಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ತುರ್ತು ಅಗತ್ಯದ ದೇವಸ್ಥಾನಗಳ ಜೀರ್ಣೋದ್ಧಾರ ಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಅಲ್ಲದೆ ದಾನಿಗಳ ನೆರವಿಗೂ ಅವಕಾಶ ಕಲ್ಪಿಸಲಾಗುವುದು ಎಂದರು.

ಕಾಶಿ ಯಾತ್ರೆಯ ಭಾರತ್ ಗೌರವ್ ಯಾತ್ರೆ ರೈಲು ಸಿದ್ಧತೆ ಕೊನೆಯ ಹಂತದಲ್ಲಿ:

ರಾಜ್ಯದಿಂದ ಕಾಶಿಗೆ ಯಾತ್ರಿಕರನ್ನು ಕರೆದೊಯ್ಯುವ 'ಭಾರತ್ ಗೌರವ್' ಯಾತ್ರೆ ರೈಲನ್ನು ಮೈಸೂರಿನಲ್ಲಿ ಮಾರ್ಪಾಡಿಸಲಾಗುತ್ತಿದೆ. ಈ ಕಾರ್ಯ ಅಂತಿಮ ಹಂತದಲ್ಲಿ ಇದ್ದು ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಮೊದಲ ರೈಲು ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಐ. ಆರ್. ಟಿ. ಸಿ ಯೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂಬಂಧ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಹಿಂದಿನವಾರ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎಂದರು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.