ಹೊಸಪೇಟೆ (ವಿಜಯನಗರ): ‘ಮಕ್ಕಳಲ್ಲಿ ಜಾಣರು–ದಡ್ಡರು ಎಂದು ಭೇದ–ಭಾವ ಮಾಡದೇ ಎಲ್ಲರನ್ನೂ ಸಮಾನರಾಗಿ ಪರಿಗಣಿಸಿ ಗುಣಮಟ್ಟದ ಶಿಕ್ಷಣ ಕೊಟ್ಟು ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಒತ್ತು ಕೊಡಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ತಿಳಿಸಿದರು.
ಸೋಮವಾರ ನಗರದಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಸಾಮಗ್ರಿಗಳ ಖರೀದಿಗೆ ₹10 ಸಾವಿರ ಒದಗಿಸಲಾಗುವುದು. ಮುಂದಿನ ವರ್ಷದ ಆರಂಭದಲ್ಲಿಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕ್ರಿಯಾಯೋಜನೆ ಸಿದ್ದಪಡಿಸಬೇಕು ಎಂದರು.
ಶಾಲೆ ತೊರೆದ ಮಕ್ಕಳನ್ನು ಮುಖ್ಯವಾಹಿನಿಗೆ ತಂದು ಅವರ ಜೀವನ ರೂಪಿಸುವ ಕೆಲಸ ಶಿಕ್ಷಕರು ಮಾಡಬೇಕು. ಮಕ್ಕಳಲ್ಲಿರುವ ಪರೀಕ್ಷೆ ಭಯ ಹೋಗಲಾಡಿಸಿ, ಉತ್ಸಾಹ ತುಂಬಬೇಕು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಪ್ಪ, ವಿಜಯನಗರ ಜಿಲ್ಲೆಯಲ್ಲಿ ಒಟ್ಟು 346 ಪ್ರೌಢಶಾಲೆಗಳಿವೆ. ಎಸ್ಸೆಸ್ಸೆಲ್ಸಿಗೆ 24629 ವಿದ್ಯಾರ್ಥಿಗಳು ದಾಖಲಾಗಿದ್ದು, 22596 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ. 72 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಮಾಹಿತಿ ಹಂಚಿಕೊಂಡರು.
ಫಲಿತಾಂಶ ಸುಧಾರಣೆಗೆ ಫೋನ್-ಇನ್ ಕಾರ್ಯಕ್ರಮ, ವಿಶೇಷ ತರಗತಿಗಳು, ಗುಂಪು ಅಧ್ಯಯನ, ವಿಷಯವಾರು ಶಿಕ್ಷಕರ ಕಾರ್ಯಾಗಾರ, ರಸ ಪ್ರಶ್ನೆ ಕಾರ್ಯಕ್ರಮ, ನೋಡಲ್ ಅಧಿಕಾರಿಗಳ ನೇಮಕ, ಓದು ಬರಹಕ್ಕೆ ಹೆಚ್ಚಿನ ಆದ್ಯತೆ, ಪೋಷಕರ ಸಭೆ, ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸದಸ್ಯರುಗಳ ಸಭೆ, ಆನ್ಲೈನ್ ತರಗತಿ ನಡೆಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಮೈಲೇಶ ಬೇವೂರ್, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.