ಹೊಸಪೇಟೆ(ವಿಜಯನಗರ): ‘ನಗರದ ಸರ್ಕಾರಿ ಆಸ್ಪತ್ರೆಯ ಆಮ್ಲಜನಕ ಘಟಕದಲ್ಲಿ ತಾತ್ಕಾಲಿಕವಾಗಿ ಎಂಜಿನಿಯರ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ತಾಂತ್ರಿಕ ದೋಷ ಕಂಡು ಬಂದರೆ ತುರ್ತಾಗಿ ಸರಿಪಡಿಸಿ, ಕೋವಿಡ್ ರೋಗಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಅವರನ್ನು ನೇಮಿಸಿಕೊಳ್ಳಲಾಗಿದೆ’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.
ಗುರುವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಆಮ್ಲಜನಕ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಈ ಹಿಂದೆ ಆಮ್ಲಜನಕ ಘಟಕದ ನಿರ್ವಹಣೆಯನ್ನು ಆಸ್ಪತ್ರೆಯ ಸಿಬ್ಬಂದಿಯೇ ಮಾಡುತ್ತಿದ್ದರು. ಈಗ ಹೆಚ್ಚುವರಿಯಾಗಿ ಮೂವರು ಎಂಜಿನಿಯರ್ಗಳು ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುವರು. ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಸದಾ ಎಚ್ಚರದಿಂದ ಇರುವಂತೆ ಸೂಚನೆ ಕೊಡಲಾಗಿದೆ’ ಎಂದು ಹೇಳಿದರು.
ಆಸ್ಪತ್ರೆಯ ಆವರಣದಲ್ಲಿ ಬಿದ್ದಿದ್ದ ಕಸದ ರಾಶಿ ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಆಸ್ಪತ್ರೆಯ ಆವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಎಲ್ಲೆಂದರಲ್ಲಿ ಕಸ ಹಾಕುವುದು ಸರಿಯಲ್ಲ. ಕೋವಿಡ್ ಹೊರತುಪಡಿಸಿ ಚಿಕಿತ್ಸೆಗೆ ಬರುವ ಇತರೆ ರೋಗಿಗಳಿಗೆ ಯಾವುದೇ ಅಡೆತಡೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.