ADVERTISEMENT

ಸಕ್ಕರೆ ಕಾರ್ಖಾನೆ ಆರಂಭಿಸಿ; ಸಿ.ಎಂ.ಗೆ ಮನವಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2022, 10:56 IST
Last Updated 6 ಫೆಬ್ರುವರಿ 2022, 10:56 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ   

ಹೊಸಪೇಟೆ (ವಿಜಯನಗರ): ತಾಲ್ಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಸಂಘದ ಪದಾಧಿಕಾರಿಗಳು ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.

ಹೊಸಪೇಟೆಯಲ್ಲಿ ಏಳು ವರ್ಷಗಳ ಹಿಂದೆ ಐಎಸ್‌ಆರ್‌ ಸಕ್ಕರೆ ಕಾರ್ಖಾನೆ ಬಂದ್‌ ಆಗಿದೆ. ಸಣ್ಣ ಹಾಗೂ ಅತಿ ಸಣ್ಣ ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಐದು ಲಕ್ಷ ಟನ್‌ಗೂ ಹೆಚ್ಚು ಕಬ್ಬು ಬೆಳೆಯುತ್ತಾರೆ. ಕಾರ್ಖಾನೆ ಮುಚ್ಚಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಬೇರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಬೇಕಾದರೆ ಪ್ರತಿ ಟನ್‌ಗೆ ₹800 ಹೊರೆಯಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಪ್ರತಿ ರೈತನಿಂದ 40 ಕ್ವಿಂಟಲ್‌ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುತ್ತಿದೆ. ಸಣ್ಣ, ಅತಿ ಸಣ್ಣ ರೈತರು ಕನಿಷ್ಠ 120 ಕ್ವಿಂಟಲ್‌ ಭತ್ತ ಬೆಳೆಯುತ್ತಾರೆ. ಸರ್ಕಾರ ವಿಧಿಸಿರುವ ಷರತ್ತು ತೆಗೆದು ಹಾಕಿ ಪ್ರತಿ ರೈತನಿಂದ 150 ಕ್ವಿಂಟಲ್‌ ಭತ್ತ ಖರೀದಿಸಬೇಕು ಎಂದು ಒತ್ತಾಯಿಸಿದರು.

ತುಂಗಭದ್ರಾ ಜಲಾಶಯದಿಂದ ಪ್ರತಿ ವರ್ಷ ನೂರಾರು ಟಿಎಂಸಿ ನೀರು ಸಮುದ್ರ ಪಾಲಾಗುತ್ತಿದೆ. ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿರುವ ಎಲ್ಲ ಕೆರೆ, ಕಟ್ಟೆಗಳನ್ನು ತುಂಬಿಸಬೇಕು. ಬಜೆಟ್‌ನಲ್ಲಿ ನಾಲ್ಕು ಕೆರೆಗಳನ್ನು ತುಂಬಿಸಲು ಹಣ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್, ಬಳ್ಳಾರಿ ಜಿಲ್ಲಾ ಗೌರವ ಅಧ್ಯಕ್ಷ ಪಿ.ನಾರಾಯಣ ರೆಡ್ಡಿ, ಮುಖಂಡರಾದ ಮಾಲತೇಶ್ ಪೂಜಾರ್, ಪ್ರಭು ಹಾವೇರಿ, ಚೆನ್ನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.