ಹೊಸಪೇಟೆ (ವಿಜಯನಗರ): ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಜಿಲ್ಲಾಡಳಿತ ಸಕ್ರಿಯವಾಗಿದ್ದು, ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಗೆ ಮುಂದಾಗಿದೆ. ಅದರ ಭಾಗವಾಗಿ ನಗರದಲ್ಲಿ ಬುಧವಾರ ವಿವಿಧ ಕಡೆಗಳಲ್ಲಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸಲಾಯಿತು.
ನಗರದ ಡಾ. ಪುನೀತ್ ರಾಜಕುಮಾರ್ ವೃತ್ತ, ವಾಲ್ಮೀಕಿ ವೃತ್ತ, ರಾಮ ಟಾಕೀಸ್, ಮೇನ್ ಬಜಾರ್, ಮಹಾತ್ಮ ಗಾಂಧಿ ವೃತ್ತ, ಪುಣ್ಯಮೂರ್ತಿ ವೃತ್ತ, ಸಾಯಿಬಾಬಾ ವೃತ್ತ, ಸಿದ್ಧಿಪ್ರಿಯ ಕಲ್ಯಾಣ ಮಂಟಪ ಸೇರಿದಂತೆ ಹಲವೆಡೆ ಸರ್ಕಾರಿ ಕಾರ್ಯಕ್ರಮಗಳ ಜಾಹೀರಾತು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು.
ಬುಧವಾರ ಬಹುತೇಕ ಚುನಾವಣೆ ದಿನಾಂಕ ಘೋಷಣೆಯಾಗಬಹುದು ಎಂದರಿತ ಜಿಲ್ಲಾಡಳಿತವು ಮಂಗಳವಾರ ಸಂಜೆಯಿಂದಲೇ ಕಾರ್ಯಾಚರಣೆಗೆ ಇಳಿದಿತ್ತು. ಹಲವೆಡೆ ಫ್ಲೆಕ್ಸ್, ಬ್ಯಾನರ್ಗಳನ್ನು ಸಂಜೆಯೇ ತೆರವುಗೊಳಿಸಲಾಗಿತ್ತು. ಬುಧವಾರ ಮಧ್ಯಾಹ್ನ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಬಿರುಸಿನಿಂದ ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.