ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಾಲಿ ಕುಲಪತಿ ಪ್ರೊ.ಸ.ಚಿ. ರಮೇಶ ಅವರ ಅಧಿಕಾರದ ಅವಧಿಯನ್ನು ಒಂದು ವರ್ಷ ವಿಸ್ತರಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ.
ಕನ್ನಡ ವಿಶ್ವವಿದ್ಯಾಲಯಕ್ಕೆ ಹೊಸ ಕುಲಪತಿ ನೇಮಕ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ರಮೇಶ ಅವರ ಅಧಿಕಾರದ ಅವಧಿ ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಫೆ. 22ರಿಂದ ಜಾರಿಗೆ ಬರುವಂತೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದೂ ತಿಳಿಸಿದ್ದಾರೆ.
ರಮೇಶ ಅವರ ಅವಧಿ ಫೆ. 21ರಂದು ಕೊನೆಗೊಂಡಿತ್ತು. ವಿಶ್ವವಿದ್ಯಾಲಯದ ಸಿಬ್ಬಂದಿಯೇ ರಮೇಶ ವಿರುದ್ಧ ಗಂಭೀರ ಸ್ವರೂಪದ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು, ಮುಖ್ಯಮಂತ್ರಿಯವರಿಗೆ ಪತ್ರ ಬರೆದು, ರಮೇಶ ಅವರ ಅವಧಿ ವಿಸ್ತರಿಸದಂತೆ ಮನವಿ ಮಾಡಿದ್ದರು. ವಿಶ್ವವಿದ್ಯಾಲಯದಲ್ಲಿ ಧರಣಿ ಸತ್ಯಾಗ್ರಹ ಕೂಡ ಮಾಡಿದ್ದರು. ಆದರೆ, ಇದ್ಯಾವುದೂ ಫಲ ನೀಡಿಲ್ಲ. ಅಧಿಕಾರದ ಅವಧಿ ವಿಸ್ತರಿಸಿಕೊಳ್ಳಲು ರಮೇಶ ಅವರು ಹಲವು ದಿನಗಳಿಂದ ತೀವ್ರ ಲಾಬಿ ನಡೆಸಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.