ADVERTISEMENT

 ಮಳೆಯಿಂದ ವಿಜಯನಗರ–ಬಳ್ಳಾರಿ ಅವಳಿ ಜಿಲ್ಲೆಗಳಲ್ಲಿ 30 ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 12:26 IST
Last Updated 28 ಆಗಸ್ಟ್ 2022, 12:26 IST
   

ಹೊಸಪೇಟೆ (ವಿಜಯನಗರ): ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯ ಬಹುತೇಕ ಕಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ನಸುಕಿನ ಜಾವದ ವರೆಗೆ ಉತ್ತಮ ಮಳೆಯಾಗಿದ್ದು, ಸತತ ಮಳೆಗೆ 30 ಮನೆಗಳ ಗೋಡೆ ಕುಸಿದು ಬಿದ್ದಿದೆ.
ವಿಜಯನಗರ ಜಿಲ್ಲೆಯಲ್ಲಿ 23 ಮನೆಗಳಿಗೆ ಹಾನಿಯಾಗಿದೆ. ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನಲ್ಲಿ 15 ಮನೆಗಳು, ಹಗರಿಬೊಮ್ಮನಹಳ್ಳಿಯಲ್ಲಿ 4, ಕೂಡ್ಲಿಗಿ ಹಾಗೂ ಹರಪನಹಳ್ಳಿಯಲ್ಲಿ ತಲಾ 2 ಮನೆಗಳು ಭಾಗಶಃ ಕುಸಿದು ಬಿದ್ದಿವೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ 4 ಮನೆಗಳು, ಕುರುಗೋಡಿನಲ್ಲಿ 3 ಮನೆಗಳಿಗೆ ಹಾನಿಯಾಗಿದೆ.ಕಂಪ್ಲಿ ತಾಲ್ಲೂಕಿನ ಚಿಕ್ಕಜಾಯಿಗನೂರು-ಬಳ್ಳಾಪುರ ಸಂಪರ್ಕಿಸುವ ನಾರಿಹಳ್ಳ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಚಿಕ್ಕಜಾಯಿಗನೂರು ಬಳಿಯ ಕಾಕಿಹಳ್ಳ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಕಂಪ್ಲಿಗೆ ಹೋಗಿ ಬರಲು ಜನ ತೊಂದರೆ ಅನುಭವಿಸುತ್ತಿದ್ದಾರೆ. ನಾರಿಹಳ್ಳಿ ಮತ್ತು ಕಾಕಿಹಳ್ಳದ ಭತ್ತದ ಗದ್ದೆಗಳು ಜಲಾವೃತವಾಗಿವೆ. ಕಂಪ್ಲಿ ತಾಲ್ಲೂಕಿನ ಇಟ್ಟಿಗಿಯಲ್ಲಿ ವಿದ್ಯುತ್‌ ಕಂಬ ಧರೆಗುರುಳಿದೆ.

ಬಿರುಸಿನ ಮಳೆಗೆ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯ ಈಗಾಗಲೇ ತುಂಬಿದ್ದು, ಒಳಹರಿವು ಪುನಃ ಹೆಚ್ಚಾಗಿರುವುದರಿಂದ ಭಾನುವಾರ ನದಿಗೆ 28 ಕ್ರಸ್ಟ್‌ಗೇಟ್‌ಗಳಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗಿದೆ. ಹಂಪಿಯ ಪುರಂದರದಾಸರ ಮಂಟಪ, ಸ್ನಾನಘಟ್ಟ, ಚಕ್ರತೀರ್ಥ ಮುಳುಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.