
ಹೊಸಪೇಟೆ (ವಿಜಯುನಗರ): ‘ರಸ್ತೆ ಅಪಘಾತ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗಬೇಕೇ ಹೊರತು ಹೆಚ್ಚಾಗಬಾರದು, ಅದಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ವಿಳಂಬ ಇಲ್ಲದೇ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಾಕೀತು ಮಾಡಿದರು.
ಇಲ್ಲಿನ ತಮ್ಮ ಕಚೇರಿಯಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಾದ್ಯಂತ ಅಗತ್ಯವಿರುವೆಡೆ ಸಿಸಿಟಿವಿ, ಸಂಚಾರ ನಿಯಂತ್ರಣ ಸೂಚನಾ ಫಲಕ, ರಸ್ತೆ ಉಬ್ಬುಗಳು, ರಸ್ತೆ ದುರಸ್ತಿ ಮುಂತಾದ ಕೆಲಸಗಳನ್ನು ಆದ್ಯತೆಯ ಮೇರೆಗೆ ನಡೆಸಬೇಕು’ ಎಂದರು.
‘ಎಲ್ಲಾ ತಾಲ್ಲೂಕುಗಳಲ್ಲೂ ಆಟೊ ನಿಲ್ದಾಣಗಳನ್ನು ನಿರ್ಮಿಸಲು ಮನವಿ ಬಂದಿದೆ. ಸ್ಥಳೀಯ ಆಡಳಿತ ಅಧಿಕಾರಿಗಳು, ಸಂಚಾರಿ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಿ ಅಗತ್ಯವಿರುವೆಡೆ ಆಟೊ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ನಗರದ ಪುನೀತ್ ರಾಜ್ಕುಮಾರ್ ವೃತ್ತದ ಬಳಿ ಹಾಗೂ ಸಿದ್ಧಿಪ್ರಿಯ ಬೇಕರಿಯಿಂದ ವಿಜಯನಗರ ಕಾಲೇಜ್ ವರೆಗೆ ಲಘು ವಾಹನಗಳಿಗೆ ನಿಲುಗಡೆಗೆ ಸ್ಥಳ ಗುರುತಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
‘ನಗರದ ಅನಂತಶಯನಗುಡಿ ಬಳಿ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ಸ್ಥಳೀಯ ಆಡಳಿತ ಸಂಸ್ಥೆ ರಸ್ತೆ ದುರಸ್ತಿಗೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಅಧಿಕಾರಿಗಳು, ಈ ಕುರಿತು ಈಗಾಗಲೇ ಯೋಜನೆ ರೂಪಿಸಲಾಗಿದೆ. ಅನುದಾನ ಕೊರತೆಯಿಂದ ದುರಸ್ತಿ ಕಾರ್ಯ ವಿಳಂಬವಾಗುತ್ತಿದೆ’ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಗಣಿ ಲಾರಿಗಳ ವೇಗ ನಿಯಂತ್ರಣಕ್ಕೆ, ಅವುಗಳಿಂದ ಅಪಘಾತಗಳು ಆಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲೇಬೇಕು ಎಂದು ಡಿ.ಸಿ ತಿಳಿಸಿದಾಗ, ಮೈನಿಂಗ್ ವಾಹನಗಳ ಬಗ್ಗೆ ಜಿಲ್ಲೆಯಾದ್ಯಂತ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದೆ. ಸಾಕಷ್ಟು ದಂಡ ಸಹ ವಿಧಿಸಲಾಗುತ್ತಿದೆ ಆರ್ಟಿಒ ದಾಮೋದರ ತಿಳಿಸಿದರು.
ಎಎಸ್ಪಿ ಜಿ.ಮಂಜುನಾಥ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದೇವದಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.