ADVERTISEMENT

ನಾನು ಶಾಸಕನೂ ಹೌದು, ಮುಖ್ಯಮಂತ್ರಿಯೂ ಹೌದು: ಸಚಿವ ಆನಂದ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 13:28 IST
Last Updated 15 ಏಪ್ರಿಲ್ 2022, 13:28 IST
ನಾನು ಶಾಸಕನೂ ಹೌದು, ಮುಖ್ಯಮಂತ್ರಿಯೂ ಹೌದು: ಸಚಿವ ಆನಂದ್‌ ಸಿಂಗ್‌
ನಾನು ಶಾಸಕನೂ ಹೌದು, ಮುಖ್ಯಮಂತ್ರಿಯೂ ಹೌದು: ಸಚಿವ ಆನಂದ್‌ ಸಿಂಗ್‌   

ಹೊಸಪೇಟೆ (ವಿಜಯನಗರ): ‘ವಿಜಯನಗರ ವಿಧಾನಸಭೆ ಕ್ಷೇತ್ರಕ್ಕೆ ನಾನು ಶಾಸಕನೂ ಹೌದು, ರಾಜ್ಯಕ್ಕೆ ಮುಖ್ಯಮಂತ್ರಿಯೂ ಹೌದು!’

ಮಾತಿನ ಭರದಲ್ಲಿ ಹೀಗೆಂದು ಹೇಳುವುದರ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌.

ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ನಗರದ ತಹಸೀಲ್ದಾರ್‌ ಕಚೇರಿ ಎದುರು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ/ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯವರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಶುಕ್ರವಾರ ಸಚಿವ ಆನಂದ್‌ ಸಿಂಗ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿದರು.

ADVERTISEMENT

ಈ ವೇಳೆ ಮಾತನಾಡಿದ ಆನಂದ್‌ ಸಿಂಗ್‌, ವಿಜಯನಗರ ಕ್ಷೇತ್ರಕ್ಕೆ ನಾನು ಶಾಸಕನೂ ಹೌದು, ರಾಜ್ಯಕ್ಕೆ ಮುಖ್ಯಮಂತ್ರಿಯೂ ಹೌದು. ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಬರುತ್ತಿದ್ದಾರೆ. ಧರಣಿ ನಡೆಸುವುದು ನಿಮ್ಮ ಹಕ್ಕು. ಆದರೆ, ಇಂತಹ ಸಂದರ್ಭದಲ್ಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಲಿ, ಅವರ ವಿರುದ್ಧ ಘೋಷಣೆ ಕೂಗುವುದಾಗಲಿ ಯಾರೂ ಮಾಡಬಾರದು. ಹೀಗೆ ಮಾಡಿದರೆ ವಿಜಯನಗರಕ್ಕೆ ಕೆಟ್ಟ ಹೆಸರು ಬರುತ್ತದೆ. ನೀವು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಮುಖ್ಯಮಂತ್ರಿ ಅವರನ್ನು ಕರೆತಂದು ಬೇಡಿಕೆ ಈಡೇರಿಸಲು ಶ್ರಮಿಸುತ್ತೇನೆ. ಎಲ್ಲರೂ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.