ವಿಜಯನಗರ (ಹೊಸಪೇಟೆ): ‘ನೂತನ ಜಿಲ್ಲೆಗೆ ವಿಶೇಷಾಧಿಕಾರಿ, ಮೇಲುಸ್ತುವಾರಿ ಅಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿದೆ. ಶೀಘ್ರದಲ್ಲೇ ಜಿಲ್ಲಾ ಕಚೇರಿಗಳ ನಿರ್ಮಾಣದ ಅಭಿವೃದ್ಧಿ ಕಾರ್ಯಗಳು ಶುರುವಾಗುತ್ತದೆ. ಮುಖ್ಯವಾಗಿ ಹೊಸ ಜಿಲ್ಲೆ ವ್ಯಾಪ್ತಿಯ ತಾಲೂಕುಗಳಲ್ಲಿ ಏತ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಹೆಚ್ಚಿನ ಒತ್ತು ಕೊಡಲಾಗುವುದು’ ಎಂದು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಹಿಂದುಳಿದ ಮೋರ್ಚಾದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
‘ನೂತನ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಟೀಕಿಸುವವರಿಗೆ ಕೆಲಸದ ಮೂಲಕವೇ ಉತ್ತರ ನೀಡಲಾಗುವುದು. ಮಾಹಿತಿ ಕೊರತೆಯಿಂದಾಗಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕೆಂದು ಹೇಳುತ್ತಿದ್ದಾರೆ. ಖನಿಜ ನಿಧಿಯಲ್ಲಿ ₹13 ಸಾವಿರ ಕೋಟಿಗೂ ಅಧಿಕ ಹಣ ಇದೆ. ಅದನ್ನು ಬಳಸಿಕೊಳ್ಳುವ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದೆ. ಈ ಹಣದಲ್ಲಿ ಎರಡೂ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಮಾಡಲಾಗುವುದು’ ಎಂದು ತಿಳಿಸಿದರು.
ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮಾತನಾಡಿ, ‘ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಕೇಂದ್ರದಲ್ಲಿ ಅಟಲ್ ಜೀ ಹಾಗೂ ಅಡ್ವಾಣಿಯವರು, ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರು ಹಕ್ಕಬುಕ್ಕರಂತೆ ಸಾಮ್ರಾಜ್ಯ ಕಟ್ಟಿದ್ದಾರೆ. ಅದೇ ರೀತಿ ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು' ಎಂದರು.
ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಸಜ್ಜನ್, ರಾಜ್ಯ ಉಪಾಧ್ಯಕ್ಷ ಸಿದ್ದೇಶ ಯಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ ನಾಯ್ಡು, ಜಿಲ್ಲಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಈಟಿ ಲಿಂಗರಾಜ, ಧನಂಜಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.