
ಹೊಸಪೇಟೆ (ವಿಜಯನಗರ): ‘ಮಾತೆತ್ತಿದ್ದರೆ ಹೈಕಮಾಂಡ್ ಎನ್ನುತ್ತ, ಕುರ್ಚಿಗೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಡಿಯೇ ಹೊರತು ಪ್ರಧಾನಿ ನರೇಂದ್ರ ಮೋದಿ ಅವರಲ್ಲ’ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
‘ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ. ಅವರು ಮುಂದೆಯೂ ಮುಖ್ಯಮಂತ್ರಿ ಹುದ್ದೆ ಬಿಡುವ ಲಕ್ಷಣ ಕಾಣುತ್ತಿಲ್ಲ. ರಾಜ್ಯ ಅಭಿವೃದ್ಧಿಯೂ ಆಗುವುದಿಲ್ಲ. ಇದೆಲ್ಲದರ ಪರಿಣಾಮ 2028ರಲ್ಲಿ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಬಳ್ಳಾರಿಯಲ್ಲಿ ಜನವರಿ 1ರಂದು ನಡೆದಿದ್ದ ಗಲಭೆ ಪ್ರಕರಣ ಕುರಿತು ಸಿಐಡಿ ತನಿಖೆ ಬಗ್ಗೆ ನನಗೆ ನಂಬಿಕೆ ಇಲ್ಲ. ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ 2 ದಿನದಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವೆ’ ಎಂದು ಹೇಳಿದರು.
ಗಂಗಾವತಿಯಿಂದಲೇ ಸ್ಪರ್ಧೆ: ‘ನನಗೆ ರಾಜಕೀಯ ಪುನರ್ಜನ್ಮ ನೀಡಿದ ಗಂಗಾವತಿ ಕ್ಷೇತ್ರವನ್ನು ಬಿಟ್ಟು
ಕೊಡುವುದಿಲ್ಲ. ಗಂಗಾವತಿ ಕ್ಷೇತ್ರದ ಜೊತೆಗೆ ಹೊಸಪೇಟೆ ಮತ್ತು ಹಂಪಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಯೋಜನೆಯನ್ನು ಹಾಕಿಕೊಂಡಿದ್ದೇನೆ’ ಎಂದರು.