ಹೊಸಪೇಟೆ (ವಿಜಯನಗರ): ಸತತವಾಗಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೋವಿಡ್ ಲಾಕ್ಡೌನ್ನಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದೆ. ಬಡವರು, ಕೆಳ ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಲು ಒದ್ದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ದರ ಏರಿಕೆಯಿಂದ ಎಲ್ಲ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ಜೀವನ ನಡೆಸಲು ತೊಂದರೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಕೋವಿಡ್ನಿಂದ ಅನೇಕರು ಅವರ ರಕ್ತಸಂಬಂಧಿಗಳನ್ನು, ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡಿದ್ದಾರೆ. ಇನ್ನಷ್ಟೇ ಅವರು ಆ ದುಃಖದಿಂದ ಹೊರಬಂದು, ಆರ್ಥಿಕವಾಗಿ ಚೇತರಿಸಿಕೊಳ್ಳಬೇಕಿದೆ. ಆದರೆ, ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ರೀತಿಯ ವಸ್ತುಗಳ ಬೆಲೆ ಹೆಚ್ಚಿಸಿ, ಅವರನ್ನು ನಿರ್ನಾಮ ಮಾಡಲು ಹೊರಟಿರುವುದು ಖಂಡನೀಯ. ಕೂಡಲೇ ತೈಲ ದರ, ಅಗತ್ಯ ವಸ್ತುಗಳ ಬೆಲೆ ಇಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಮುಖಂಡರಾದ ಕೆ. ಕೋಟ್ರೇಶ್, ಅತಾಯ ರಸೂಲ್, ನಬಿ ಸಾಬ್, ಕೆ. ಕೃಷ್ಣ, ಎ.ನಾರಾಯಣ, ಬಿ.ಎಂ. ಹುಲುಗಪ್ಪ, ಗಾಳಿ ನಾಗರಾಜ, ಸೋಮಶೇಖರ್, ಡಿ.ಮೊಹಮ್ಮದ್ ರಫೀಕ್, ಇನಾಯತ್ ಡೇಗಲ್, ಎಚ್.ಎಂ. ಪ್ರಶಾಂತ್, ಚಂದ್ರಕಾಂತ್, ರಾಜಶೇಖರ್ ಗೌಡ, ಎಚ್. ಶಬ್ಬೀರ್, ರಾಜಾ ಹುಸೇನ್, ಕಾಶಿ, ನವೀನ್, ರಮೇಶ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.