ಹೊಸಪೇಟೆ (ವಿಜಯನಗರ): ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಕೆಲ ಆಯ್ದ ಗ್ರಾಮಗಳಲ್ಲಿ 24 ಗಂಟೆ ನೀರು ಪೂರೈಕೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರಾಜ್ಯ ಉಪಕಾರ್ಯದರ್ಶಿ ಜಾಫರ್ ಶರೀಫ್ ಸುತಾರ ಅವರು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿ ಶುಕ್ರವಾರ ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮದಡಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಮೂಲಕ ಕುಡಿಯುವ ನೀರನ್ನು ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಪೂರೈಕೆ ಆಗುವಂತೆ ನಿಗಾವಹಿಸಬೇಕು ಎಂದರು.
ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಜೆಜೆಎಂ ಮೂಲಕ ನಳದಲ್ಲಿ ಬರುವ ನೀರನ್ನು ಕುಡಿಯುವಂತೆ ಜಾಗೃತಿ ಮೂಡಿಸಬೇಕು ಎಂದರು. 24 ಗಂಟೆ ನೀರು ಪೂರೈಕೆಯಿಂದ ಎದುರಾಗುವ ಸವಾಲುಗಳ ಬಗ್ಗೆ ಪಿಡಿಓಗಳಿಂದ ಚರ್ಚಿಸಲಾಯಿತು.
ಬಳಿಕ ತಾಲ್ಲೂಕಿನ ಬುಕ್ಕಸಾಗರ ಗ್ರಾಮ ಪಂಚಾಯಿತಿಯ 76 ವೆಂಕಟಾಪುರ ಗ್ರಾಮಕ್ಕೆ ಭೇಟಿ ನೀಡಿ ಜಲ್ಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ವೀಕ್ಷಿಸಿದರು.
ಸಭೆಯಲ್ಲಿ ವಿಶ್ವ ಬ್ಯಾಂಕ್ ಟಾಸ್ಕ್ ಟೀಮ್ ಲೀಡರ್ ಎಂ.ಕುಳ್ಳಪ್ಪ, ಗುರುಗಾವ್ ಪೀಡ್ಬ್ಯಾಕ್ ಪೌಂಢೇಶನ್ ಸಿಇಒ ಅಜಯ್ ಸಿನ್ಹಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಎಸ್.ದೀಪಾ, ಆರ್ಡಬ್ಲೂಎಸ್ ಎಇಇ ವೀರೇಶ್ ನಾಯಕ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.