ಹೊಸಪೇಟೆ (ವಿಜಯನಗರ): ‘ಕಲ್ಯಾಣ ಕರ್ನಾಟಕದಲ್ಲಿ ನೈಸರ್ಗಿಕ ಸಂಪನ್ಮೂಲಗಳಿಗೆ ಯಾವುದೇ ಕೊರತೆಯಿಲ್ಲ. ಆದರೆ, ಈ ಭಾಗದ ಜನರಿಗೆ ಸಂಪನ್ಮೂಲಗಳ ಫಲಗಳು ಸರಿಯಾಗಿ ಸಿಗುತ್ತಿಲ್ಲ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ನಾಗರಾಜ ಅಕ್ಕರಕ್ಕಿ ತಿಳಿಸಿದರು.
ಇಲ್ಲಿನ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ಅಧ್ಯಯನ ಪೀಠದಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ‘ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಮತ್ತು ವರ್ತಮಾನ’ ಕುರಿತು ಉಪನ್ಯಾಸ ನೀಡಿದರು.
ಈ ಭಾಗ ಹಿಂದುಳಿಯಲು ಇಚ್ಛಾಶಕ್ತಿಯ ಕೊರತೆಯೇ ಮುಖ್ಯ ಕಾರಣ. ಇಲ್ಲಿ ಬೆಳೆಯುವ ಉದ್ದು, ತೊಗರಿ, ಭತ್ತ ದೇಶ-ವಿದೇಶಗಳಿಗೆ ರಫ್ತಾಗುತ್ತವೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಸುಮಾರು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದರು.
ಕುಲಸಚಿವ ಎ.ಸುಬ್ಬಣ್ಣ ರೈ, ಅವಿಭಜಿತ ಬಳ್ಳಾರಿಯು ಆಡಳಿತಾತ್ಮಕವಾಗಿ ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದರೂ ಸಾಂಸ್ಕೃತಿಕವಾಗಿ ಮತ್ತು ಶೈಕ್ಷಣಿಕವಾಗಿ ಕಲ್ಯಾಣ ಕರ್ನಾಟಕದ ಲಕ್ಷಣಗಳನ್ನು ಹೊಂದಿದೆ. ಈ ಭಾಗವು ಸಾಮಾಜಿಕ ಪಿಡುಗುಗಳಿಂದ ಮುಕ್ತವಾಗಬೇಕಿದೆ ಎಂದು ಹೇಳಿದರು.
ಆಡಳಿತ ಮಂಡಳಿ ಸದಸ್ಯೆ ರಾಜೇಶ್ವರಿ, ಪೀಠದ ಸಂಚಾಲಕ ಎ.ಶ್ರೀಧರ್, ಸಂಗೀತ ವಿಭಾಗದ ಅಧ್ಯಾಪಕಿ ಜ್ಯೋತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.