ADVERTISEMENT

ವಿಧಾನಸಭೆ ಚುನಾವಣೆ: ಕೂಡ್ಲಿಗಿ ಕ್ಷೇತ್ರದ ಡಾ. ಶ್ರೀನಿವಾಸ್‌ಗೆ ಕಾಂಗ್ರೆಸ್ ಟಿಕೆಟ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 7:06 IST
Last Updated 6 ಏಪ್ರಿಲ್ 2023, 7:06 IST
ಡಾ.ಎನ್.ಟಿ. ಶ್ರೀನಿವಾಸ್
ಡಾ.ಎನ್.ಟಿ. ಶ್ರೀನಿವಾಸ್   

ಹೊಸಪೇಟೆ(ವಿಜಯನಗರ): ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಅವರ ಮಗ ಡಾ. ಎನ್.ಟಿ. ಶ್ರೀನಿವಾಸ್ ಅವರಿಗೆ ಕಾಂಗ್ರೆಸ್ ಪಕ್ಷವು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಿಸಿದೆ.

ಗುಜ್ಜಲ್ ರಘು, ಕಾವಲಿ ಶಿವಪ್ಪ ನಾಯಕ, ಜಿ. ನಾಗಮಣಿ, ನರಸಿಂಹಗಿರಿ ಸೇರಿದಂತೆ ಹಲವರು ಟಿಕೆಟ್ ಗಾಗಿ ತೀವ್ರ ಕಸರತ್ತು ನಡೆಸಿದ್ದರು. ಪಕ್ಷ ಸ್ಥಳೀಯ ಮುಖಂಡರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.

ಆದರೆ, ಪಕ್ಷವು ಅಂತಿಮವಾಗಿ ಶ್ರೀನಿವಾಸ್ ಅವರಿಗೆ ಮಣೆ ಹಾಕಿದೆ. ಶ್ರೀನಿವಾಸ್ ಅವರು ವೃತ್ತಿಯಿಂದ ವೈದ್ಯರಾಗಿದ್ದಾರೆ‌. ಮೂಲತಃ ಕೂಡ್ಲಿಗಿಯವರಾದರೂ ತುಮಕೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದಾರೆ. ಅವರ ತಂದೆಯ ನಿಧನದ ನಂತರ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ಮೊದಲ ಪ್ರಯತ್ನದಲ್ಲೆ ಕಾಂಗ್ರೆಸ್ ಅವರಿಗೆ ಮಣೆ ಹಾಕಿದೆ.

ಇತ್ತೀಚೆಗೆ ಎನ್.ವೈ.ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಪಕ್ಷವು ಗೋಪಾಲಕೃಷ್ಣ ಅವರಿಗೆ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಘೋಷಿಸಿದೆ. ಎರಡೂ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ. ಈ ಎರಡೂ ಕ್ಷೇತ್ರಗಳಿಗೆ ಇನ್ನಷ್ಟೇ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಘೋಷಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT