
ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಪಕ್ಷಾತೀತವಾಗಿ ಶಾಸಕರು ಕಮಿಷನ್ ದಂಧೆಕೋರರಾಗಿದ್ದಾರೆ. ಶೇ 30ರಿಂದ 40ರಷ್ಟು ಶಾಸಕರಂತೂ ಇದರಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇವೆ. ಅದರ ಭಾಗವಾಗಿಯೇ ಶಿರಹಟ್ಟಿ ಶಾಸಕರು ಸಿಕ್ಕಿಬಿದ್ದಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.
ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಲಿರುವ ಮುಷ್ಕರ ಪ್ರಯುಕ್ತ ಜಿಲ್ಲಾ ಪ್ರವಾಸದಲ್ಲಿರುವ ಅವರು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಮಗಾರಿ ಮುಗಿದ ನಂತರ ಬಿಲ್ ಪಾವತಿ ವೇಳೆ ಕಮಿಷನ್ ಪಡೆಯುವ ಕಾಲ ಈಗ ಹೊರಟುಹೋಗಿದೆ, ಮೊದಲೇ ಕಮಿಷನ್ ನೀಡಬೇಕಾಗಿದೆ. ಗುದ್ದಲಿ ಪೂಜೆ ಮಾಡುವ ಹಂತದಲ್ಲೇ ಶಾಸಕರಿಗೆ ಕಮಿಷನ್ ನೀಡಬೇಕಾಗುತ್ತದೆ, ಅಧಿಕಾರಿಗಳು ಇಲ್ಲಿ ಮಧ್ಯವರ್ತಿಗಳಾಗಿ ವರ್ತಿಸಿ ಗುತ್ತಿಗೆದಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ ಎಂದರು.
ಶೇ 60ರಷ್ಟು ಕಮಿಷನ್ ಎಂದು ಹೇಳಿಲ್ಲ: ಈ ಹಿಂದಿನ ಸರ್ಕಾರದಲ್ಲಿ ಶೇ 40ರಷ್ಟು ಕಮಿಷನ್ ಇತ್ತು, ಈ ಸರ್ಕಾರದಲ್ಲಿ ಶೇ 60ರಷ್ಟು ಕಮಿಷನ್ ದಂಧೆ ಇದೆ ಎಂದು ನಾನು ಹೇಳಿಲ್ಲ, ನನ್ನ ಮಾತನ್ನು ತಿರುಚಲಾಗಿದೆ. ಆದರೆ ಈ ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಚೆನ್ನಾಗಿ ಬಳಸಿಕೊಂಡಿದ್ದು ನಿಜ. ಆದರೆ ನಾವು ಸಹ ಅದೇ ಹಾದಿ ತುಳಿದಿಲ್ಲ. ಗುತ್ತಿಗೆದಾರರ ಬಾಕಿ ಬಿಲ್ ಮೊತ್ತ ₹37 ಸಾವಿರ ಕೋಟಿಯನ್ನು ತಕ್ಷಣ ಕೊಡಿ ಎಂಬುದಷ್ಟೇ ನಮ್ಮ ಬೇಡಿಕೆ ಎಂದರು.
ಮಾರ್ಚ್ 6ಕ್ಕೆ ಮುಷ್ಕರ: ಬೇಡಿಕೆ ಈಡೇರಿಸಲು ಆಗ್ರಹಿಸಿ ಮಾರ್ಚ್ 6ರುಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ ಎಲ್ಲಾ 31 ಜಿಲ್ಲೆಗಳಿಂದ ಬರಲಿರುವ ಗುತ್ತಿಗೆದಾರರ ಸಹಿತ ಒಂದು ದಿನದ ಮುಷ್ಕರ ನಡೆಸಲಾಗುವುದು. ಅಂದು ರಾಜ್ಯದೆಲ್ಲೆಡೆ ಕಾಮಗಾರಿಗಳು ಸ್ಥಗಿತಗೊಂಡಿರುತ್ತವೆ. ಸರ್ಕಾರ ಅಗಲೂ ಸ್ಪಂದಿಸದಿದ್ದರೆ ಎಪ್ರಿಲ್ನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಮಂಜುನಾಥ್ ಎಚ್ಚರಿಸಿದರು.
ಸಂಘದ ಪದಾಧಿಕಾರಿಗಳಾದ ನಾಗಪ್ಪ, ರಾಜಶೇಖರ ಪಾಟೀಲ್, ಜಗದೀಶ್, ಕಿಚಡಿ ಶ್ರೀನಿವಾಸ್, ಕೇಶವ ರೆಡ್ಡಿ, ನಾಗರಾಜ, ಮಹೇಶ್ ಹಲಗೇರಿ, ಉಮಾಕಾಂತ್, ದೇವಿಪ್ರಸಾದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.