ADVERTISEMENT

ಕಾನೂನು ಅರಿತು ಕೆಲಸ ಮಾಡಿ: ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಸಲಹೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 10:37 IST
Last Updated 27 ಜುಲೈ 2022, 10:37 IST
   

ಹೊಸಪೇಟೆ (ವಿಜಯನಗರ): ‘ಕಂದಾಯ ಇಲಾಖೆಯ ಸಿಬ್ಬಂದಿ ಕಾನೂನು, ನಿಯಮ ಅರಿತು ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಸಕಾಲಕ್ಕೆ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಸಲಹೆ ಮಾಡಿದರು.

ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದೀರಿ. ನಿಮ್ಮಲ್ಲಿರುವ ಸೇವಾ ಮನೋಭಾವ ಹಾಗೂ ಬದ್ಧತೆ ಇದೇ ರೀತಿ ಮುಂದುವರಿಯಬೇಕು ಎಂದರು‌‌.

ಸಾರ್ವಜನಿಕರಿಗೆ ಸೇವೆ ಒದಗಿಸಲು ಸುಲಭವಾಗುವ ರೀತಿಯಲ್ಲಿ ತಂತ್ರಜ್ಞಾನ ಇದೆ. ಅದನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಸಿಬ್ಬಂದಿಗೆ ಬೇಕಾದ ಅಗತ್ಯ ತರಬೇತಿ ಜೊತೆಗೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಮಾತನಾಡಿ, ಕರ್ತವ್ಯದ ಜೊತೆಗೆ ಸಂಘಟನೆಯನ್ನು ಮುನ್ನಡೆಸಿಕೊಂಡು ಸಿಬ್ಬಂದಿಗೆ ಅಗತ್ಯವಿರುವ ಸೌಲಭ್ಯಗಳನ್ನು ಜಿಲ್ಲಾಡಳಿತದ ಮೂಲಕ ಪಡೆದುಕೊಳ್ಳಬೇಕು ಎಂದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಕಂದಾಯ ಇಲಾಖೆ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಿಬ್ಬಂದಿಗೆ ಕಂದಾಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉಪವಿಭಾಗಾಧಿಕಾರಿಗಳಾದ ಪ್ರಕಾಶ್ ಟಿ.ವಿ, ಸಿದ್ದರಾಮೇಶ್ವರ, ತಹಶೀಲ್ದಾರರಾದ ವಿಶ್ವಜೀತ್ ಮೆಹ್ತಾ, ಶರಣಮ್ಮ ಕೆ., ಶಿವಕುಮಾರ ಬಿರಾದಾರ, ಮೇಘ, ಕಾರ್ತಿಕ್ ವಿ., ಗುರುಬಸವರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೌಡ ಜಿ., ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಯಂಕಾರೆಡ್ಡಿ ಕೆ., ಫಕ್ಕೀರಪ್ಪ, ಅರುಂಧತಿ ನಾಗಾವಿ, ನಿವೃತ್ತ ಉಪ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ನಿವೃತ್ತ ಉಪ ತಹಶೀಲ್ದಾರ್ ಎಚ್.ಸುಶಿಲೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.