ಹರಪನಹಳ್ಳಿ (ವಿಜಯನಗರ ಜಿಲ್ಲೆ): ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಕುರುಬ ಸಮುದಾಯವನ್ನು ಸೇರಿಸುವ ಪ್ರಸ್ತಾವ ವಿರೋಧಿಸಿ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದಿಂದ ಬುಧವಾರ ಇಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಸಮಾಜದ ಅಧ್ಯಕ್ಷ ವೈ.ಡಿ.ಅಣ್ಣಪ್ಪ ಅವರು, ‘ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಅನ್ಯಾಯವಾಗುತ್ತದೆ. ಸೇರ್ಪಡೆ ಮಾಡಿದರೆ, ಉಗ್ರ ಸ್ವರೂಪದ ಹೋರಾಟ ಮಾಡುತ್ತೇವೆ’ ಎಂದರು.
ಗೌರವ ಅಧ್ಯಕ್ಷ ಎಚ್.ಕೆ.ಹಾಲೇಶ್ ಮಾತನಾಡಿ, ‘ಎಲ್.ಜಿ. ಹಾವನೂರು ವರದಿಯಂತೆ ಶೇ 7.5 ಮೀಸಲಾತಿ ಕೊಡುವುದಾಗಿ ಹೇಳಿದ್ದ ಸರ್ಕಾರ ಈವರೆಗೂ ಈಡೇರಿಸಿಲ್ಲ. ಆದರೆ, ಇತರ ಜಾತಿಗಳನ್ನು ಎಸ್ಟಿಗೆ ಸೇರಿಸುವ ಹುನ್ನಾರ ಮಾತ್ರ ನಡೆಸುತ್ತಿದೆ ಎಂದರು.
ಹಿರಿಯ ಮುಖಂಡ ಕೋಡಿಹಳ್ಳಿ ಭೀಮಪ್ಪ ಮಾತನಾಡಿ, ‘ಶೋಷಿತರ ಪರವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನ್ಯ ಜಾತಿಗಳನ್ನು ಪರಿಶಿಷ್ಟ ಪಂಗಡ ಮೀಸಲಾತಿಗೆ ಸೇರಿಸಿದರೆ ಶೋಷಿತ ಸಮುದಾಯಗಳ ಧ್ವನಿ ದಮನ ಮಾಡಿದಂತಾಗುತ್ತದೆ’ ಎಂದರು.
ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ವನಜಾಕ್ಷಮ್ಮ, ಮುಖಂಡರಾದ ಕೆ.ಉಚ್ಚೆಂಗೆಪ್ಪ, ಶಿರಹಟ್ಟಿ ದಂಡೆಪ್ಪ, ಎಚ್.ಹನುಮಂತಪ್ಪ ಸೇರಿ ಹಲವರಿದ್ದರು.
ಸರ್ಕಾರದ ವಿರುದ್ಧ ಧಿಕ್ಕಾರ: ಹೂವಿನಹಡಗಲಿಯಲ್ಲಿ ವಾಲ್ಮೀಕಿ ಮಹಾಸಭಾದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.