
ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆಯಲ್ಲಿ ನಡೆದ ಒನಕೆ ಓಬವ್ವ ಉತ್ಸವ ಸಮಾರೋಪ ಸಮಾರಂಭದಲ್ಲಿ ಕಲಾವಿದೆ ಮಂಜಮ್ಮ ಜೋಗತಿ ಮಾತನಾಡಿದರು
ಕೂಡ್ಲಿಗಿ: ‘ಹೆಚ್ಚಿನ ಕಲಾವಿದರಿಗೆ ಅವಕಾಶ ನೀಡಲು ಹಾಗೂ ಅವರ ಕಲೆಯನ್ನು ಪ್ರದರ್ಶಿಸಲು ಅಧಿಕ ಕಾಲಾವಕಾಶ ಒದಗಿಸಲು ಎರಡು ವೇದಿಕೆಗಳನ್ನು ನಿರ್ಮಾಣ ಮಾಡಬೇಕು’ ಎಂದು ಕಲಾವಿದೆ ಮಂಜಮ್ಮ ಜೋಗತಿ ಸಲಹೆ ನೀಡಿದರು.
ತಾಲ್ಲೂಕಿನ ಗುಡೇಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಉತ್ಸವದ ಸಮಾರೋಪ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶ್ರೀನಿವಾಸ್ ಎನ್.ಟಿ. ಮಾತನಾಡಿ, ‘ಒಂದು ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮುಂದಿನ ದಿನಗಳಲ್ಲಿ ಪ್ರತಿಭಾವಂತ ಕಲಾವಿದರರಿಗೆ ಅವಕಾಶ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ’ ಎಂದು ಹೇಳಿದರು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಕೃಷ್ಣ, ಸಹಾಯಕ ಆಯುಕ್ತ ವಿವೇಕಾನಂದ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಇಒ ಮರಸಪ್ಪ, ಕಾವಲಿ ಶಿವಪ್ಪ ನಾಯಕ, ಇತರರು ಇದ್ದರು.
ಸಚಿವರು, ಸಂಸದರು ಗೈರು: ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಸಚಿವರು, ಸಂಸದರು ಬಾರದೆ ಇದ್ದದ್ದರಿಂದ ಜನರಲ್ಲಿ ಬೇಸರ ಮೂಡಿತು. ಶನಿವಾರ ನಡೆದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಸಚಿವರಾದ ಜಮೀರ್ ಅಹಮದ್ ಖಾನ್, ಎಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಸಂಸದ ಈ ತುಕಾರಾಂ ಸೇರಿದಂತೆ ಜಿಲ್ಲೆ ಶಾಸಕರು ಗೈರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.