ಶಾಂತಾ
ಹೊಸಪೇಟೆ (ವಿಜಯನಗರ): ಇಲ್ಲಿನ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ (ಎಂಸಿಎಚ್) ಬುಧವಾರ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲ್ಲೂಕು ದಶಮಾಪುರ ಗ್ರಾಮದ ಶಾಂತಾ (20) ಮೃತ ಬಾಣಂತಿ.
‘ಭಾನುವಾರ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು, ಆರೋಗ್ಯವಂತ ಹೆಣ್ಣು ಮಗು ಜನಿಸಿತ್ತು. ಆದರೆ ಬಳಿಕ ಆಕೆಯ ಆರೋಗ್ಯದ ಮೇಲೆ ನಿಗಾ ವಹಿಸದ್ದರಿಂದ ಬಾಣಂತಿಯ ಸಾವು ಸಂಭವಿಸಿರುವ ಸಂಶಯ ಇದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಹೆರಿಗೆ ಮಾಡಿಸಿದ ಗುತ್ತಿಗೆ ವೈದ್ಯೆ ಡಾ.ಸಿಂಧೂ ಷಾ ಮತ್ತು ಶುಷ್ರೂಷಕ ಎಸ್.ಜೆ.ರಘುನಾಥ್ ಅವರನ್ನು ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ವಜಾಗೊಳಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್ಒ) ಡಾ. ಎಲ್.ಆರ್.ಶಂಕರ್ ನಾಯ್ಕ್ ತಿಳಿಸಿದರು.
‘ವಿವರವಾದ ತನಿಖೆಯ ಬಳಿಕ ಬಾಣಂತಿ ಸಾವಿಗೆ ಕಾರಣ ಗೊತ್ತಾಗಲಿದೆ. ಮಹಿಳೆಗೆ ಬೇರೆ ಏನಾದರೂ ಕಾಯಿಲೆ ಇತ್ತೇ ಎಂಬುದನ್ನು ತಿಳಿಯುವ ಪ್ರಯತ್ನ ನಡೆದಿದೆ. ವೈದ್ಯೆ ಸಿಂಧೂ ಷಾ ಅವರು ಉಜ್ಜಿನಿ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆಯಾಗಿದ್ದು, ನಿಯೋಜನೆ ಮೇರೆಗೆ ಇಲ್ಲಿಗೆ ಬಂದಿದ್ದರು’ ಎಂದು ಡಿಎಚ್ಒ ಹೇಳಿದರು.
ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪಟ್ಟಣ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.