ADVERTISEMENT

ಸ್ವಾತಂತ್ರ್ಯ ದಿನಾಚರಣೆ: ವಿಜಯನಗರದಲ್ಲಿ ಸಚಿವ ಆನಂದ್‌ ಸಿಂಗ್‌ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 15:15 IST
Last Updated 10 ಆಗಸ್ಟ್ 2021, 15:15 IST
ಸಚಿವ ಆನಂದ್‌ ಸಿಂಗ್‌
ಸಚಿವ ಆನಂದ್‌ ಸಿಂಗ್‌    

ಹೊಸಪೇಟೆ (ವಿಜಯನಗರ): ಸಚಿವ ಆನಂದ್‌ ಸಿಂಗ್‌ ಅವರು ಈ ಸಲ ನೂತನ ವಿಜಯನಗರ ಜಿಲ್ಲೆಯಲ್ಲೇ ತ್ರಿವರ್ಣ ಧ್ವಜಾರೋಹಣ ನೆರವೇರಿಸುವರು.

ಯಾವ ಸಚಿವರು, ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಂಗಳವಾರ ಆಯಾ ಸಚಿವರಿಗೆ ಹೊಣೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಆನಂದ್‌ ಸಿಂಗ್‌ ಅವರು ನಗರದ ಮುನ್ಸಿಪಲ್‌ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸುವರು. ಇನ್ನು, ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಧ್ವಜಾರೋಹಣ ಮಾಡುವರು.

ಆ. 15ರಂದು ಆನಂದ್‌ ಸಿಂಗ್‌ ನಗರದ ರೋಟರಿ ವೃತ್ತ, ನಗರ ಹೊರವಲಯದ ಜೋಳದರಾಶಿ ಗುಡ್ಡದ ಮೇಲೆ ಹೊಸದಾಗಿ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ಜಿಲ್ಲಾಡಳಿತದಿಂದ ನಗರದ ಮುನ್ಸಿಪಲ್‌ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡುವ ಗೌರವ ಆನಂದ್‌ ಸಿಂಗ್‌ ಅವರಿಗೆ ಸಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.