ADVERTISEMENT

ಡಿಜಿಟಲ್‌ ಶಿಕ್ಷಣದಿಂದ ವಂಚಿತರಾದವರಿಗೆ ಪ್ರೋತ್ಸಾಹ ಅಂಕ ಕೊಡಿ: ರಾಜ್ಯ ರೈತ ಸಂಘ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 11:37 IST
Last Updated 3 ಆಗಸ್ಟ್ 2021, 11:37 IST
ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿಯ ಮುಖಂಡರು ಮಂಗಳವಾರ ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು
ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿಯ ಮುಖಂಡರು ಮಂಗಳವಾರ ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಎಂಟನೆ ಅಥವಾ ಒಂಬತ್ತನೇ ತರಗತಿಯ ಅಂಕಗಳನ್ನು ಆಧರಿಸಿ ಪ್ರೋತ್ಸಾಹ ಅಂಕ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಸಂಘಟನೆಗಳ ಮುಖಂಡರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಸಲ್ಲಿಸಿ, ಒತ್ತಾಯಿಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪಾಠ ಹೇಳಿಕೊಡಲಾಗಿದೆ. ಆದರೆ, ರೈತರು, ದಲಿತರು, ಹಿಂದುಳಿದ ವರ್ಗದ ಮಕ್ಕಳು, ಗುಡ್ಡಗಾಡು ಪ್ರದೇಶದವರ ಮಕ್ಕಳು ಅದರಿಂದ ವಂಚಿತರಾಗಿದ್ದಾರೆ. ಇನ್ನಷ್ಟೇ ಅವರು ಮುಖ್ಯ ವಾಹಿನಿಗೆ ಬರಬೇಕು. ಡಿಜಿಟಲ್‌ ಶಿಕ್ಷಣ ಇನ್ನೂ ಅವರಿಗೆ ದೂರದ ಮಾತು. ಹಾಗಾಗಿ ಒಂದುವೇಳೆ ಈ ವರ್ಗದ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿ, ಅವರ ಎಂಟನೇ ಅಥವಾ ಒಂಬತ್ತನೇ ತರಗತಿಯ ಅಂಕಗಳನ್ನು ಆಧರಿಸಿ ಅವರಿಗೆ ಅಂಕ ಕೊಡಬೇಕು ಎಂದು ಆಗ್ರಹಿಸಿದರು.

ADVERTISEMENT

ಕೋವಿಡ್‌ ಲಾಕ್‌ಡೌನ್‌ ನಗರ ಹಾಗೂ ಗ್ರಾಮೀಣ ಪ್ರದೇಶದವರು, ಅವಕಾಶದಿಂದ ವಂಚಿತರಾದ ಮಕ್ಕಳ ನಡುವೆ ದೊಡ್ಡ ಕಂದಕವನ್ನೇ ಸೃಷ್ಟಿಸಿದೆ. ಸರ್ಕಾರ ಎಲ್ಲ ಆಯಾಮದಲ್ಲಿ ಯೋಚಿಸಿ, ಮುಖ್ಯವಾಹಿನಿಯಿಂದ ದೂರ ಇರುವವರ ಭವಿಷ್ಯದ ದೃಷ್ಟಿಯಿಂದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಅಧ್ಯಕ್ಷ ಬಿ. ಗೋಣಿಬಸಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಎ. ಕುಮಾರಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಂ. ಬಸವರಾಜ, ಮುಖಂಡರಾದ ಗುರುಬಸಯ್ಯ, ಜಿ. ಮೆಹಬೂಬ್‌ ಸಾಬ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.