ಹೊಸಪೇಟೆ (ವಿಜಯನಗರ): ‘ನಗರಸಭೆಯ ಹಾಲಿ ಪೌರಾಯುಕ್ತ ಬಿ.ಎಸ್. ರಮೇಶ್ ಅವರು ಆರೋಗ್ಯ ಸರಿಯಿಲ್ಲವೆಂದು ದೀರ್ಘ ರಜೆ ಪಡೆದಿದ್ದಾರೆ. ಪೌರಾಯುಕ್ತರಿಂದಲೇ ಕೆಲಸ ಆಗಬೇಕು ಎಂದೇನಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿದ್ದು, ಶನಿವಾರದೊಳಗೆ ಹೊಸ ಪೌರಾಯುಕ್ತರು ಬರುತ್ತಾರೆ’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೂಗಳ್ಳರ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೆಲ ಅಧಿಕಾರಿಗಳ ಅಮಾನತಿಗೆ ಜಿಲ್ಲಾಡಳಿತ ಶಿಫಾರಸು ಮಾಡಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರ ಆಸ್ತಿಯನ್ನು ಕಬಳಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು.
‘ಭೂಗಳ್ಳತನಕ್ಕೆ ನೆರವಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಯವರು ಈಗಾಗಲೇ ಎಸ್ಪಿಯವರಿಗೆ ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆಯ ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದು, ಮುಂದೆ ನಗರಸಭೆಯಲ್ಲಿ ತಪ್ಪುಗಳು ಆಗದಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.