ಸಿದ್ದರಾಮಯ್ಯ
ಹರಪನಹಳ್ಳಿ (ವಿಜಯನಗರ ಜಿಲ್ಲೆ): ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ ಆತಿಥ್ಯ ಕೊಟ್ಟಿರುವ ಪ್ರಕರಣ ಸಂಬಂಧ ಸೋಮವಾರ ಸಚಿವರು ಅಧಿಕಾರಿಗಳ ಸಭೆ ಕರೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ ಪಿ.ಟಿ.ಭರತ್ ಮದುವೆಗೆ ಭಾನುವಾರ ಇಲ್ಲಿಗೆ ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.
ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಕೊಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು. ನೊಂದಣಿ ಆಗದ ಎಲ್ಲ ಸಂಘಟನೆ ನಿಷೇಧಿಸಲು ನಾವು ಹೇಳಿದ್ದೇವೆ ಹೊರತು ಬರೀ ಆರ್ಎಸ್ಎಸ್ ಎಂದು ಹೇಳಿಲ್ಲ. ಆದರೆ ಅವರೂ ಈ ರೀತಿ ಅರ್ಥಮಾಡಿಕೊಂಡರೋ ಹೇಗೆ ಹೇಳೋದು ಎಂದರು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಂಬಂಧ ಪ್ರಕರಣ ಹೈಕೋರ್ಟ್ ನಲ್ಲಿದೆ, ತೀರ್ಪಿನಂತೆ ಕ್ರಮವಹಿಸುವುದಾಗಿ ತಿಳಿಸಿದರು.
ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಕೊಡಬೇಕು. ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರಾಜ್ಯ ಸರ್ಕಾರ ಪರಿಹಾರ ಕೊಡುತ್ತದೆ ಎಂದು ಹೇಳಿದರು.
ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕಾರ್ಖಾನೆ ಮಾಲೀಕರು ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ವಿರೋಧಿಸುವ ಮಾಲೀಕರಾಗಲಿ, ಬಸನಗೌಡ ಪಾಟೀಲ್ ಯತ್ನಾಳ್ ಆಗಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.