ಹೊಸಪೇಟೆ (ವಿಜಯನಗರ): ಶಿವಮೊಗ್ಗದಲ್ಲಿ ನಡೆದ ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.
ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಒಟ್ಟಿಗೆ ಪ್ರತಿಭಟನೆ ನಡೆಸಿದರೆ, ಭಾವಸಾರ ಕ್ಷತ್ರಿಯ ಸಮಾಜದವರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಿತೂರಿಯಿಂದ ಹರ್ಷ ಕೊಲೆ ನಡೆದಿದೆ. ಕೂಡಲೇ ಎರಡನ್ನೂ ನಿಷೇಧಿಸಬೇಕು. ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಬಜರಂಗ ದಳದ ಮುಖಂಡರಾದ ಎಸ್.ತಿಪ್ಪೇಸ್ವಾಮಿ, ವಿಜಯಲಕ್ಷ್ಮಿ, ಆನಂದ ಕೃಷ್ಣ, ಸೂರಿ ಬಂಗಾರು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಿರಣ್ ಶಂಕ್ರಿ, ರಾಜಶೇಖರ, ಹನುಮಂತಪ್ಪ ಸಿಂಧೆ, ನಾಗರಾಜ, ಭಾವಸಾರ ಕ್ಷತ್ರಿಯ ಸಮಾಜದ ಮುಖಂಡರಾದ ಕೃಷ್ಣಮೂರ್ತಿ ರಾವ್ ಪಟಿಗೆ, ಸುಲಾಖೆ ರಾಜು, ಸುತ್ರಾವೆ ಮಧುಕರ ರಾವ್, ಕೆ. ಸೋಮನಾಥ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.