ಹೊಸಪೇಟೆ (ವಿಜಯನಗರ): ಕನಿಷ್ಠ ವೇತನ ₹36 ಸಾವಿರ ನಿಗದಿಪಡಿಸಬೇಕು ಎಂಬ ಪ್ರಮುಖ ಬೇಡಿಕೆ ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ವಿವಿಧ ಹಾಸ್ಟೆಲ್ಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು, ಕಾವಲುಗಾರು, ಅಟೆಂಡರ್, ಡಿ ಗ್ರೂಪ್ ಹೊರಗುತ್ತಿಗೆ ಸಿಬ್ಬಂದಿ ಪಾಲ್ಗೊಂಡಿದ್ದರು.
ನಿವೃತ್ತಿವರೆಗೆ ಎಲ್ಲಾ ಸಿಬ್ಬಂದಿಗೆ ಸೇವಾ ಭದ್ರತೆ ಕೊಟ್ಟು ಕಾಯಂ ಮಾಡಬೇಕು, ಬಾಕಿ ಇರುವ ವೇತನ ತಕ್ಷಣ ಕೊಡಬೇಕು, ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ವಾರದ ರಜೆ, ಇಎಸ್ಐ, ಇತರ ಸೌಲಭ್ಯ ಕೊಡಬೇಕು, ಹಂಪಿ ಕನ್ನಡ ವಿಶ್ವವಿದ್ಯಾಲಯದ 48 ಹೊರಗುತ್ತಿಗೆ ನೌಕರರಿಗೆ ಕಳೆದ 11 ತಿಂಗಳಿಂದ ಬಾಕಿ ಉಳಿಸಿಕೊಂಡ ಸಂಬಳ ಕೊಡಬೇಕು ಎಂದು ಒತ್ತಾಯಿಸಲಾಯಿತು.
ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮನವಿ ಸ್ವೀಕರಿಸಿದರು. ಕಾರ್ಮಿಕ ಮುಖಂಡರಾದ ಮರಡಿ ಜಂಬಯ್ಯ ನಾಯಕ, ಬಿ.ರಮೇಶ್ಕುಮಾರ್, ಸತ್ಯಮೂರ್ತಿ, ಸೂರ್ಯನಾರಾಯಣ, ನಾಗೂನಾಯಕ, ಸೀತಮ್ಮ, ಶರಣಪ್ಪ ಚಕ್ರಶಾಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.