ಹೊಸಪೇಟೆ (ವಿಜಯನಗರ): ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಪಥ ಸಂಚಲನ ನಡೆಯಿತು.
ಬಳಿಕ ಮಾತನಾಡಿದ ಸಚಿವೆ ಶಶಿಕಲಾ, ಇಡೀ ದೇಶಕ್ಕೆ 1947 ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೆ, ಕಲ್ಯಾಣ ಕರ್ನಾಟಕಕ್ಕೆ ಒಂದು ವರ್ಷವಾಗಿ ತಡವಾಗಿ ಅಂದರೆ 1948, ಸೆ. 17ರಂದು ಸಿಕ್ಕಿತು. ಸ್ವಾತಂತ್ರ್ಯ ದಿನ ಆಚರಿಸಿದ ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಸಂಭ್ರಮ ಕ್ಕೆ ಸಾಕ್ಷಿಯಾಗುತ್ತಿದ್ದೇವೆ ಎಂದರು.
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಸಂವಿಧಾನಕ್ಕೆತಿದ್ದುಪಡಿ ತಂದ ನಂತರ ಮೀಸಲಾತಿಯ ಫಲವಾಗಿ ಈ ಭಾಗದ ವಿದ್ಯಾರ್ಥಿ ಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಅನುಕೂಲವಾಗಿದೆ ಎಂದು ಹೇಳಿದರು.
2022-23ನೇ ಸಾಲಿನಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ವಿಜಯನಗರ ಜಿಲ್ಲೆಗೆ ₹179 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ಸಿಕ್ಕಿದೆ. ಆರೋಗ್ಯ, ಶಿಕ್ಷಣ, ಮೂಲ ಸೌಲಭ್ಯ, ಹಂಪಿಯಲ್ಲಿ ಸಂವಹನ ಕೇಂದ್ರ, ರಂಗಮಂದಿರ, ಕೌಶಲ ಕೇಂದ್ರ, ವಿವೇಕ ಯೋಜನೆಯಡಿ ಎಲ್ಲ ತಾಲ್ಲೂಕುಗಳಲ್ಲಿ 130 ಹೊಸ ಸ್ಮಾರ್ಟ್ ಕ್ಲಾಸ್ ರೂಂ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕದ ವಿಮೋಚನೆಗೆ ಶ್ರಮಿಸಿದವರನ್ನು ಇದೇ ವೇಳೆ ನೆನೆದರು.
ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ಮಹೇಶಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಜಿಲ್ಲಾ ಪಂಚಾಯಿತಿ ಸಿ.ಇ.ಒ ಹರ್ಷಲ್ ಭೋಯರ್, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ, ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್. ಆನಂದ್, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.