ADVERTISEMENT

ಕಾಂಗ್ರೆಸ್‌ನಿಂದ ವಿನಾಶ, ಬಿಜೆಪಿಯಿಂದ ವಿಕಾಸ: ಶಿವರಾಜ್‌ ಸಿಂಗ್ ಚೌಹಾಣ್‌

ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಧ್ಯ ಪ್ರದೇಶದ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2023, 12:16 IST
Last Updated 16 ಮಾರ್ಚ್ 2023, 12:16 IST
ಬಿಜೆಪಿ ರೋಡ್‌ ಶೋದಲ್ಲಿ ಭಾಗವಹಿಸಿದ್ದ ಶಿವರಾಜ್‌ ಸಿಂಗ್‌ ಚೌಹಾಣ್‌
ಬಿಜೆಪಿ ರೋಡ್‌ ಶೋದಲ್ಲಿ ಭಾಗವಹಿಸಿದ್ದ ಶಿವರಾಜ್‌ ಸಿಂಗ್‌ ಚೌಹಾಣ್‌    

ಹೊಸಪೇಟೆ (ವಿಜಯನಗರ): 'ದೇಶದಲ್ಲಿ ಕಾಂಗ್ರೆಸ್ಸಿಗರು ವಿನಾಶದ ಕೆಲಸ ಮಾಡುತ್ತಿದ್ದರೆ, ಬಿಜೆಪಿ ವಿಕಾಸಕ್ಕಾಗಿ ಕೆಲಸ ಮಾಡುತ್ತಿದೆ’ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದರು.

ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ರೋಡ್‌ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಬಲ್‌ ಎಂಜಿನ್‌ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳು ಬಹಳ ವೇಗವಾಗಿ ನಡೆಯುತ್ತಿವೆ. ಕರ್ನಾಟಕ ವಿಜ್ಞಾನ, ಆಧ್ಯಾತ್ಮದ ತವರೂರು. ಇಲ್ಲಿ ನಾಲ್ಕೂ ದಿಕ್ಕಿನಿಂದ ಅಭಿವೃದ್ಧಿ ಕೆಲಸಗಳಾಗುತ್ತಿವೆ. ದೇಶ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಜನರ ಭವಿಷ್ಯ ಬದಲಾಗುತ್ತಿದೆ ಎಂದು ತಿಳಿಸಿದರು.

ಭಾರತದ ನವ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಈ ಭೂಮಿ ಮೇಲೆ ಜನ್ಮ ತಾಳಿದ್ದಾರೆ. 2014ರಲ್ಲಿ ಅವರು ಪ್ರಧಾನಿಯಾದ ನಂತರ ಭಾರತಕ್ಕೆ ಗೌರವ ತಂದುಕೊಡುವ ಕೆಲಸ ಮಾಡಿದ್ದಾರೆ. ಇಂದು ಜಗತ್ತಿನೆಲ್ಲೆಡೆ ಮೋದಿ ಜೈಕಾರ ಕೇಳಿಸುತ್ತಿದೆ. ನಮ್ಮ ದೇಶದಲ್ಲೂ ಮೋದಿಯಂತಹ ವ್ಯಕ್ತಿ ಇರಬೇಕಿತ್ತು ಎಂದು ಪಾಕಿಸ್ತಾನದವರು ಹೇಳುತ್ತಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಭಾರತ ಸಮೃದ್ಧ, ಶಕ್ತಿಶಾಲಿಯಾಗುತ್ತಿದೆ ಎಂದು ಹೇಳಿದರು.

ADVERTISEMENT

ಛತ್ತೀಸಗಡದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಅಧಿವೇಶನದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಸಿಲಿನಲ್ಲಿ ನಿಂತಿದ್ದರು. ಅವರಿಗೆ ಯಾವುದೇ ನೆರಳಿನ ವ್ಯವಸ್ಥೆ ಮಾಡಿರಲಿಲ್ಲ. ಆದರೆ, ಸೋನಿಯಾ ಗಾಂಧಿ ಅವರಿಗೆ ಛತ್ರಿ ವ್ಯವಸ್ಥೆ ಮಾಡಲಾಗಿತ್ತು. ಇದು ಕರ್ನಾಟಕಕ್ಕೆ ಮಾಡಿದ ಅಪಮಾನ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನಡುವೆ ಹೊಂದಾಣಿಕೆ ಇಲ್ಲ. ಜೆಡಿಎಸ್‌ನಿಂದ ಕಾಂಗ್ರೆಸ್ಸಿಗೆ ಅನುಕೂಲ. ರಾಜ್ಯದಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌, ಸಾರಿಗೆ ಸಚಿವ ಬಿ. ಶ್ರೀರಾಮುಲು, ಶಾಸಕ ಜಗದೀಶ ಶೆಟ್ಟರ್‌, ವಿಧಾನ ಪರಿಷತ್‌ ಸದಸ್ಯ ವೈ. ಸತೀಶ್‌ ರೆಡ್ಡಿ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಮುಖಂಡರಾದ ಸಿದ್ದರಾಜು, ರಾಣಿ ಸಂಯುಕ್ತಾ, ಕವಿತಾ ಈಶ್ವರ್‌ ಸಿಂಗ್‌, ಭರಮನಗೌಡ, ಅಯ್ಯಾಳಿ ತಿಮ್ಮಪ್ಪ ಇತರರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.