ಹೊಸಪೇಟೆ (ವಿಜಯನಗರ): ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಏ. 11ರಿಂದ 17ರ ವರೆಗೆ ನಗರದ ತಹಶೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದ್ದು, ಜಿಲ್ಲಾಧಿಕಾರಿ ಅನುಮತಿ ಕೊಡದಿದ್ದರೂ ಧರಣಿ ಮಾಡಿಯೇ ತೀರಲಾಗುವುದು ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಮುಖಂಡರು ತಿಳಿಸಿದರು.
ಶನಿವಾರ ಇಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮರಡಿ ಜಂಬಯ್ಯ ನಾಯಕ, ದುರುಗಪ್ಪ ಪೂಜಾರಿ, ಜಂಬಯ್ಯ ನಾಯಕ, ಎಂ.ಸಿ. ವೀರಸ್ವಾಮಿ ಮಾತನಾಡಿ, ಜೈಲಿಗೆ ಹೋಗಲೂ ಸಿದ್ಧ. ಯಾವುದೇ ಬೆದರಿಕೆಗೆ ಜಗ್ಗಲ್ಲ. ಸರ್ಕಾರ ಕಣ್ಣು ತೆರೆಯಬೇಕು ಎಂದರು.
ಏ.16, 17ರಂದು ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಆದರೆ, ಆ ಸ್ಥಳಕ್ಕೆ ಹೋಗುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಕ್ಕೆ ಬರುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಮೀಸಲಾತಿ ಹೆಚ್ಚಿಸಿ ಘೋಷಿಸಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿಯನ್ನು ಕ್ರಮವಾಗಿ ಶೇ 15ರಿಂದ ಶೇ 17, ಶೇ 3ರಿಂದ ಶೇ 7.5ಕ್ಕೆ ಹೆಚ್ಚಿಸಬೇಕು. ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಎರಡು ತಿಂಗಳಿಂದ ಹರಿಹರದ ವಾಲ್ಮೀಕಿ ಮಹರ್ಷಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದಾರೆ. ಸರ್ಕಾರ ಸ್ಪಂದಿಸಿಲ್ಲ. ಬರುವ ದಿನಗಳಲ್ಲಿ ಸಮಾಜದ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರದಿದ್ದರೆ ಅವರ ಮನೆಗಳ ಮುಂದೆ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.