ADVERTISEMENT

ವಿಭಜಕ ಶಕ್ತಿಗಳಿಂದ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಯತ್ನ: ಪ್ರೊ. ಛಗನ್‌ಭಾಯ್ ಪಟೇಲ್

ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಪ್ರೊ. ಛಗನ್‌ಭಾಯ್ ಪಟೇಲ್ ಆರೋಪ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2022, 12:07 IST
Last Updated 25 ಫೆಬ್ರುವರಿ 2022, 12:07 IST
ಕೇಂದ್ರ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿಗಳ ಸಭೆ
ಕೇಂದ್ರ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿಗಳ ಸಭೆ    

ಹೊಸಪೇಟೆ (ವಿಜಯನಗರ): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಎರಡು ದಿನಗಳ ಕೇಂದ್ರ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿಗಳ ಸಭೆ ನಗರ ಹೊರವಲಯದ ವಿಜಯಶ್ರೀ ಹೆರಿಟೇಜ್‌ನಲ್ಲಿ ಶುಕ್ರವಾರ ಆರಂಭಗೊಂಡಿತು.

ಮೇಘಾಲಯ, ಮಣಿಪುರ ಸೇರಿದಂತೆ ದೇಶದ ವಿವಿಧ ಭಾಗಗಳಿಂದ 1,500ಕ್ಕೂ ಹೆಚ್ಚು ಪ್ರತಿನಿಧಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ.

ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಪ್ರೊ.ಛಗನ್‌ಭಾಯ್ ಪಟೇಲ್ ಉದ್ಘಾಟಿಸಿ, ‘ಕಾಲೇಜು ಕ್ಯಾಂಪಸ್‌ಗಳಲ್ಲಿ ಸಮವಸ್ತ್ರ ನೀತಿ ಕುರಿತು ಹೈಕೋರ್ಟ್‌ ಸ್ಪಷ್ಟವಾಗಿ ತಿಳಿಸಿದೆ. ಹೀಗಿದ್ದರೂ ಕೆಲ ವಿಭಜಕ ಶಕ್ತಿಗಳು ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಪ್ರಯತ್ನಿಸುತ್ತಿವೆ. ಕ್ಯಾಂಪಸ್‌ನಲ್ಲಿ ಸಾಮರಸ್ಯವಿರಬೇಕು. ಶಿಕ್ಷಣ ಕ್ಷೇತ್ರವು ಪಂಥೀಯ ವೇಷಗಳಿಂದ ಮುಕ್ತವಾಗಿರಬೇಕು’ ಎಂದು ಹೇಳಿದರು.

ADVERTISEMENT

ದೇಶದಲ್ಲೀಗ ಪ್ರಜಾಪ್ರಭುತ್ವದ ಹಬ್ಬ ನಡೆಯುತ್ತಿದೆ. ರಚನಾತ್ಮಕ ಕೆಲಸ ಮಾಡುವ ರಾಷ್ಟ್ರೀಯವಾದಿ ಶಕ್ತಿಗಳನ್ನು ಜನ ಆಯ್ಕೆ ಮಾಡಬೇಕು. ದೇಶದ ಹೆಚ್ಚಿನ ಯುವಕರು ಉದ್ಯೋಗಾವಕಾಶ ಕಂಡುಕೊಳ್ಳಲು ತೊಂದರೆ ಎದುರಿಸುತ್ತಿದ್ದಾರೆ.

ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಿ ಅವಕಾಶ ಸೃಷ್ಟಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಧಿ ತ್ರಿಪಾಠಿ, ರಾಷ್ಟ್ರೀಯ ಶಿಕ್ಷಣ ನೀತಿಯ ಮಹತ್ವ ತಿಳಿಸಿಕೊಡಲು ಪರಿಷತ್ತಿನಿಂದ ಸಮಿತಿಗಳನ್ನು‌ ರಚಿಸಲಾಗಿದೆ. ದೇಶದಾದ್ಯಂತ ಕಾರ್ಯಕ್ರಮಗಳನ್ನು ಸಂಘಟಿಸಿ ಅದರ ಮಹತ್ವ ಸಾರಲಾಗುವುದು.

ಪಶ್ಚಿಮ ಬಂಗಾಳ, ತಮಿಳುನಾಡು ಹೊರತುಪಡಿಸಿ ದೇಶದ ಎಲ್ಲ ರಾಜ್ಯಗಳು ಹೊಸ ಶಿಕ್ಷಣ ನೀತಿ ಜಾರಿಗೆ ಮುಂದಾಗಿವೆ. ಈ ಎರಡೂ ರಾಜ್ಯಗಳು ರಾಜಕೀಯ ಕಾರಣಗಳಿಗಾಗಿ ಎನ್‌ಇಪಿ ಜಾರಿಗೊಳಿಸುತ್ತಿಲ್ಲ. ಇದರಿಂದ ಅಲ್ಲಿನ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಬೇಕಾಗುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ ಆ ರಾಜ್ಯದ ವಿದ್ಯಾರ್ಥಿಗಳು ಹಿಂದೆ ಬೀಳುತ್ತಾರೆ ಎಂದರು.

ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಷ್‌ ಚೌಹಾಣ್, ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.