ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತವು ಜಿಲ್ಲಾ ಖನಿಜ ನಿಧಿ ಪ್ರತಿಷ್ಠಾನದಡಿ ತಾಲ್ಲೂಕಿನ ವಿದ್ಯಾವಂತ ಯುವಕರಿಗೆ ಏರ್ಪಡಿಸಿರುವ ‘ಸ್ಫೂರ್ತಿ’–2022 ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಸೋಮವಾರ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಚಾಲನೆ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉದ್ಯೋಗಾವಕಾಶ ಪಡೆಯಲು ಜಿಲ್ಲಾಡಳಿತ ಈ ಯೋಜನೆ ರೂಪಿಸಿದೆ. ಉಚಿತವಾಗಿ ತರಬೇತಿ ಕೊಟ್ಟು, ಪರೀಕ್ಷೆಗಳಿಗೆ ಸಜ್ಜುಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಯೋಜನೆಯಡಿ ಟಿಇಟಿ, ಎಫ್ಡಿಎ, ಎಸ್ಡಿಎ, ಪಿಎಸ್ಐ, ಪಿಸಿ, ಬ್ಯಾಂಕಿಂಗ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಸಿದ್ಧತೆಗೆ ತರಬೇತಿ ನೀಡಲಾಗುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ, ಖಾಸಗಿ ಕಂಪನಿ ಹಾಗೂ ಸಂಸ್ಥೆಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಜ್ಞಾನದ ಅಗತ್ಯವಿದೆ. ಪರೀಕ್ಷೆ ಎದುರಿಸುವುದು ಹೇಗೆ? ಅದಕ್ಕೆ ಸಿದ್ಧತೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತರಬೇತಿ ಕೊಡಲಾಗುತ್ತದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸಂಸದ ವೈ.ದೇವೇಂದ್ರಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಮಂಜುನಾಥ ಬಿ., ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಮಹೇಶ್ಬಾಬು, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಜಿಲ್ಲಾ ಖನಿಜ ನಿಧಿ ವಿಶೇಷಾಧಿಕಾರಿ ಈರಣ್ಣ ಬಿರಾದಾರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪ್ರಾಚಾರ್ಯ ನಟರಾಜ ಪಾಟೀಲ, ಪ್ರಾಧ್ಯಾಪಕ ಟಿ.ಎಚ್. ಬಸವರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.