ADVERTISEMENT

ಕತ್ತಲಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು: ಶಾಸಕರಿಂದ ತೀವ್ರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 12:38 IST
Last Updated 19 ಜುಲೈ 2021, 12:38 IST
ಪರೀಕ್ಷಾ ಕೇಂದ್ರಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭೇಟಿ
ಪರೀಕ್ಷಾ ಕೇಂದ್ರಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭೇಟಿ   

ಕೂಡ್ಲಿಗಿ: ಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಕೊಠಡಿಯೊಂದರಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಕತ್ತಲಲ್ಲಿಯೇ ಪರೀಕ್ಷೆ ಬರೆದಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿಯೊಂದನ್ನು ಎರಡು ಭಾಗಗಳನ್ನಾಗಿ ಮಾಡಿದ್ದರು. ಅದರಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಹೊರಗೆ ಮೋಡ ಕವಿದ ವಾತಾವರಣ ಇದ್ದುದ್ದರಿಂದ ಕೊಠಡಿಯಲ್ಲಿ ಬೆಳಕಿನ ಅಭಾವವಿತ್ತು. ಅಲ್ಲದೆ ವಿದ್ಯುತ್ ಸಂಪರ್ಕ ಸಹ ಇರಲಿಲ್ಲ.

ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆಗೆಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಭೇಟಿ ನೀಡಿದಾಗ ವಿದ್ಯಾರ್ಥಿಗಳು ಕತ್ತಲಲ್ಲಿ ಪರೀಕ್ಷೆ ಬರೆಯುತ್ತಿರುವುದನ್ನು ಕಂಡು, ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತ, ‘ಈ ರೀತಿ ಕತ್ತಲು ಇದ್ದರೆ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು’ ಎಂದು ಪರೀಕ್ಷಾ ಮೇಲ್ವಿಚಾರಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು.

ADVERTISEMENT

‘ಎಲ್ಲಾ ಕೊಠಡಿಗಳಲ್ಲಿ ವಿದ್ಯುತ್ ಸಂಪರ್ಕ ಇದೆ. ಆದರೆ ಈ ಕೊಠಡಿಯಲ್ಲಿ ಮಾತ್ರ ಇಲ್ಲ’ ಎಂದು ಪರೀಕ್ಷಾ ಮೇಲ್ವಿಚಾರಕ ಎಂ. ಕೊಟ್ರೇಶ್ ಹೇಳಿದರು.

ಪರೀಕ್ಷಾ ಸಿದ್ದತೆಗಳನ್ನು ಕೈಗೊಳ್ಳುವಾಗ ಇಂತಹ ದೋಷಗಳನ್ನು ಸರಿಪಡಿಸಿಕೊಳ್ಳಬೇಕು. ಇನ್ನು ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್ ಟಿ. ಜಗದೀಶ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಸಮೂಹ ಸಂಪನ್ಮೂಲ ಅಧಿಕಾರಿ ಟಿ. ಶರಣಪ್ಪ, ಎಸ್. ಸಿದ್ದಾರಾಧ್ಯ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.