ಹೊಸಪೇಟೆ (ವಿಜಯನಗರ): ಇಲ್ಲಿನ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸುಂಕಮ್ಮ, ಉಪಾಧ್ಯಕ್ಷರಾಗಿ ಎಲ್.ಎಸ್. ಆನಂದ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.
ಸುಂಕಮ್ಮ 4ನೇ ವಾರ್ಡ್, ಆನಂದ್ 15ನೇ ವಾರ್ಡ್ ಸದಸ್ಯರು. ಅಧ್ಯಕ್ಷ ಸ್ಥಾನಕ್ಕೆ ಸುಂಕಮ್ಮ ಹೊರತುಪಡಿಸಿ ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಬಿ. ನಾರಾಯಣಪ್ಪ ಹಾಗೂ ಬಿಜೆಪಿಯಿಂದ ಆನಂದ್ ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಚುನಾವಣೆಯಲ್ಲಿ ಆನಂದ್ ಆಯ್ಕೆಯಾದರು.
ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಚುನಾವಣೆ ನಡೆಸಿಕೊಟ್ಟರು.
ಡಿಸೆಂಬರ್ನಲ್ಲಿ ನಗರಸಭೆಗೆ ನಡೆದ ಚುನಾವಣೆಯಲ್ಲಿ ಒಟ್ಟು 35 ಸ್ಥಾನಗಳಲ್ಲಿ ಕಾಂಗ್ರೆಸ್ 12, ಪಕ್ಷೇತರರು 12, ಬಿಜೆಪಿ ಹತ್ತು, ಎಎಪಿ ಒಂದು ಸ್ಥಾನದಲ್ಲಿ ಜಯ ಗಳಿಸಿತ್ತು. ನಂತರ ನಡೆದ ಬೆಳವಣಿಗೆಯಲ್ಲಿ ಎಎಪಿಯ ಒಬ್ಬ ಸದಸ್ಯ ಹಾಗೂ ಒಂಬತ್ತು ಜನ ಪಕ್ಷೇತರರು ಬಿಜೆಪಿ ಸೇರಿದ್ದರು. ಇದರೊಂದಿಗೆ ಬಿಜೆಪಿ ಸಂಖ್ಯಾಬಲ 20ಕ್ಕೆ ಹೆಚ್ಚಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.