ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಅಣೆಕಟ್ಟೆ ಮತ್ತೊಮ್ಮೆ ತುಂಬುವ ಹಂತಕ್ಕೆ ಬಂದಿದೆ. ಯಾವುದೇ ಕ್ಷಣದಲ್ಲಿ ಅಣೆಕಟ್ಟೆಯಿಂದ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದ್ದು, ನದಿ ತೀರದ ನಿವಾಸಿಗಳು ಎಚ್ಚರವಹಿಸಬೇಕು ಎಂದು ತುಂಗಭದ್ರಾ ಮಂಡಳಿ ಸೂಚನೆ ನೀಡಿದೆ.
‘ತುಂಗಾ ಮತ್ತು ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿರುವ ಪರಿಣಾಮ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚುತ್ತಿದೆ. ಜಲವಿದ್ಯುದಾಗಾರದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದಿಸುವ ಮೂಲಕ 5 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುವುದು. ಒಳಹರಿವಿನ ಪ್ರಮಾಣ ಹೆಚ್ಚಾದಲ್ಲಿ ನದಿಗೆ ನೀರು ಹರಿಸುವ ಪ್ರಮಾಣವೂ ಹೆಚ್ಚಬಹುದು’ ಎಂದಿದೆ.
ತುಂಗಭದ್ರಾ ಅಣೆಕಟ್ಟೆಯ ಗರಿಷ್ಠ ಮಟ್ಟ 1,633 ಅಡಿಯಿದ್ದು, ಸದ್ಯ ನೀರಿನ ಮಟ್ಟ 1,630.13 ಅಡಿ ಇದೆ. 105.78 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 94.55 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ರೈತರಿಗೆ ಈಗ ಒಂದು ಬೆಳೆಗೆ ನೀರು ಸಿಗುತ್ತದೆ. ಮಳೆ, ಒಳಹರಿವು ಹೆಚ್ಚಳ ಮುಂದುವರಿದರೆ ಹಾಗೂ ಹಿಂಗಾರು ಮಳೆಯಾದರೆ, ಎರಡನೇ ಬೆಳೆಗೂ ನೀರು ಸಿಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.