ಹಗರಿಬೊಮ್ಮನಹಳ್ಳಿ: ‘ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳು ದೊರೆಯುತ್ತವೆ. ಜತೆಗೆ ಶಿಕ್ಷಣದೊದಿಗೆ ಜೀವನದ ಪಾಠ ಬೋಧನೆ ಪರಿಣಾಮಕಾರಿಯಾಗಿ ದೊರೆಯುತ್ತದೆ’ ಎಂದು ಪುರಸಭೆ ಅಧ್ಯಕ್ಷ ಎಂ.ಮರಿರಾಮಪ್ಪ ಹೇಳಿದರು.
ಪಟ್ಟಣದ ಗಂ.ಭೀ.ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರಿ ಶಾಲೆಗಳು ಬಡವರ ಮಕ್ಕಳಿಗೆ ದಾರಿದೀಪವಾಗಿವೆ.ವಿಶೇಷ ಚಟುವಟಿಕೆಗಳಿಗೆ ಪುರಸಭೆಯಿಂದ ಎಲ್ಲ ಸೌಲಭ್ಯ ಒದಗಿಸಲಾಗುವುದು. ರಾಮನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪುರಸಭೆ ವ್ಯಾಪ್ತಿಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು’ ಎಂದರು.
ಬಿಇಒ ಮೈಲೇಶ್ ಬೇವೂರ್ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ, ಸರ್ಕಾರದ ಪ್ರಮುಖ ಹುದ್ದೆಗಳಲ್ಲಿರುವ ಅನೇಕರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದವರಾಗಿದ್ದಾರೆ’ ಎಂದರು.
ಎಸ್ಡಿಎಂಸಿ ಅಧ್ಯಕ್ಷ ಹುಲುಗಪ್ಪ, ಉಪಾಧ್ಯಕ್ಷೆ ಪ್ರಿಯಾಂಕ, ಹಳೇ ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ವೀರೇಶ್ ಮಜ್ಗಿ, ರಾಮನಗರ ಶಾಲೆಯ ಅಧ್ಯಕ್ಷ ಶಾಬುದ್ದೀನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹ್ಯಾಟಿ ಲೋಕಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜಕುಮಾರನಾಯ್ಕ, ಮುಖ್ಯ ಶಿಕ್ಷಕ ವಟ್ಟಮ್ಮನಹಳ್ಳಿ ಮಲ್ಲಪ್ಪ, ವೀರನಗೌಡ, ಮುಖಂಡ ಸೆರೆಗಾರ ಹುಚ್ಚಪ್ಪ, ಗುಂಡ್ರು ಹನುಮಂತಪ್ಪ, ಬಿಆರ್ಪಿ ಪರಮೇಶ್ವರಯ್ಯ ಸೊಪ್ಪಿಮಠ, ಗೀತಾ, ಗೌರಮ್ಮ, ಎಚ್.ಎಂ.ವನಿತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.