ಹೊಸಪೇಟೆ (ವಿಜಯನಗರ): ಪಂಚಾಯತ್ರಾಜ್ ದಿವಸ್ ಕಾರ್ಯಕ್ರಮಕ್ಕೆ ತಾಲ್ಲೂಕಿನ ಮಲಪನಗುಡಿ ಗ್ರಾಮ ಪಂಚಾಯಿತಿ ಸೇರಿದಂತೆ ರಾಜ್ಯದ ಮೂರು ಪಂಚಾಯಿತಿಗಳು ಆಯ್ಕೆಯಾಗಿದ್ದು, ಈ ಪೈಕಿ ಅಂತಿಮಗೊಳ್ಳುವ ಒಂದು ಪಂಚಾಯಿತಿಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳುವರು.
ಕಲಬುರ್ಗಿ ಜಿಲ್ಲೆಯ ಭೀಮಳ್ಳಿ, ಶಿವಮೊಗ್ಗದ ಹೊಳಲೂರು ಕಾರ್ಯಕ್ರಮಕ್ಕೆ ಆಯ್ಕೆಯಾದ ಇನ್ನೆರಡು ಪಂಚಾಯಿತಿಗಳು. ಮಲಪನಗುಡಿಯಲ್ಲಿ ಘನತ್ಯಾಜ್ಯ ವಿಲೇವಾರಿಯಲ್ಲಿ ಉತ್ತಮ ಕೆಲಸವಾಗಿದೆ. ಇನ್ನೆರಡು ಪಂಚಾಯಿತಿಗಳಲ್ಲಿ ಉತ್ತಮ ಮೂಲಸೌಕರ್ಯ ಕಲ್ಪಿಸಿರುವುದರಿಂದ ಕಾರ್ಯಕ್ರಮಕ್ಕೆ ಇವುಗಳ ಹೆಸರನ್ನು ಆಯ್ಕೆ ಮಾಡಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಈ ಮೂರರಲ್ಲಿ ಕೇಂದ್ರ ಸರ್ಕಾರ ಒಂದು ಪಂಚಾಯಿತಿಯನ್ನು ಆಯ್ಕೆ ಮಾಡಲಿದ್ದು, ಬರುವ ಏಪ್ರಿಲ್ 24ರಂದು ಪಂಚಾಯತ್ರಾಜ್ ದಿವಸ್ ಕಾರ್ಯಕ್ರಮವನ್ನು ಅಲ್ಲಿ ಆಚರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು, 2.5 ಲಕ್ಷ ಗ್ರಾಮ ಪಂಚಾಯಿತಿಗಳನ್ನು ಉದ್ದೇಶಿಸಿ ಭಾಷಣ ಮಾಡುವರು. ಇನ್ನಷ್ಟೇ ಪಂಚಾಯಿತಿ ಹೆಸರು ಅಂತಿಮಗೊಳ್ಳಬೇಕಿದೆ. ಆದರೆ, ಮಲಪನಗುಡಿ ಪಂಚಾಯಿತಿಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಾರ್ಚ್ನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವರು.
‘ಕಾರ್ಯಕ್ರಮಕ್ಕೆ ಮಲಪನಗುಡಿ ಸೇರಿದಂತೆ ರಾಜ್ಯದ ಮೂರು ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಪೂರ್ವಸಿದ್ಧತಾ ಸಭೆ ನಡೆಸಿ, ಅಗತ್ಯ ಮಾಹಿತಿ ನೀಡಲಾಗಿದೆ. ಇನ್ನಷ್ಟೇ ಪ್ರಧಾನಿಯವರು ಯಾವ ಪಂಚಾಯಿತಿಯಲ್ಲಿ ಏರ್ಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುವುದು ಅಂತಿಮಗೊಳ್ಳಬೇಕಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.