ಹೊಸಪೇಟೆ (ವಿಜಯನಗರ): ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಗುರುವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಶಾಂತಿಗಾಗಿ ಪಾರಂಪರಿಕ ನಡಿಗೆಗೆ ಚಾಲನೆ ನೀಡಿದರು.
ಎದುರು ಬಸವಣ್ಣದಿಂದ ಮಾತಂಗ ಪರ್ವತ, ಅಚ್ಯುತರಾಯ ದೇವಸ್ಥಾನ, ಅಚ್ಯುತರಾಯ ಬಜಾರ್ , ಕೋದಂಡರಾಮ ದೇವಸ್ಥಾನ, ತುಂಗಭದ್ರ ನದಿವರೆಗೆ ಶಾಂತಿಗಾಗಿ ಪಾರಂಪರಿಕ ನಡಿಗೆ ಮಾಡಲಾಯಿತು.
‘ವರ್ಷದಿಂದ ವರ್ಷಕ್ಕೆ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಹಂಪಿಯಲ್ಲಿ ಪ್ರವಾಸಿಗರು ನೋಡದೆ ಇರುವ ಸ್ಮಾರಕಗಳು ಬಹಳಷ್ಟು ಇವೆ. ಅವುಗಳನ್ನು ಪರಿಚಯ ಮಾಡಿಸುವುದು ಹಾಗೂ ಅಗತ್ಯದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಈ ಪಾರಂಪರಿಕ ನಡಿಗೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂಪಿಯಲ್ಲಿ ಪ್ರವಾಸಿಗರಿಗೆ ಇನ್ನಷ್ಟು ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ಎಸ್.ತಳಕೇರಿ, ಕೆಎಸ್ಟಿಡಿಸಿ ಹೋಟೆಲ್ ವ್ಯವಸ್ಥಾಪಕ ಸುನಿಲ್ ಕುಮಾರ್, ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘದ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಿ ವಿ.ಹಂಪಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.