ADVERTISEMENT

ವಿಶ್ವಪ್ರಸಿದ್ಧ ಹಂಪಿಗೆ ಉಪರಾಷ್ಟ್ರಪತಿ ಭೇಟಿ: ಸ್ಮಾರಕ ನೋಡಿ ಬೆರಗಾದ ನಾಯ್ಡು

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 4:57 IST
Last Updated 21 ಆಗಸ್ಟ್ 2021, 4:57 IST
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.    

ಹೊಸಪೇಟೆ (ವಿಜಯನಗರ): ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪತ್ನಿ ಎಂ.ಉಷಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.

ಅವರ ಭೇಟಿ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿತ್ತು.

ದೇವರ ದರ್ಶನದ ಬಳಿಕ ಅವರು ಕೃಷ್ಣ ದೇವಸ್ಥಾನ, ಕಡಲೆಕಾಳು, ಸಾಸಿವೆಕಾಳು, ಕಮಲ ಮಹಲ್, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ಕಣ್ತುಂಬಿಕೊಂಡರು. ಶ್ರೀಮಂತ ವಾಸ್ತುಶಿಲ್ಪ ನೋಡಿ ಬೆರಗಾದರು.

ಕೊರೊನಾ ಹರಡುವುದನ್ನು ತಡೆಯಲು ವಾರಾಂತ್ಯದಲ್ಲಿ ಹಂಪಿ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ವೆಂಕಯ್ಯ ನಾಯ್ಡು ಭೇಟಿ ಪ್ರಯುಕ್ತ ಹಂಪಿಯಲ್ಲಿ ಇನ್ನಷ್ಟು ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.

ಶುಕ್ರವಾರ ಸಂಜೆ ನಗರಕ್ಕೆ ಬಂದ ಅವರು, ತುಂಗಭದ್ರಾ ಜಲಾಶಯ ವೀಕ್ಷಿಸಿ ಕಮಲಾಪುರದ ಪ್ರವಾಸೋದ್ಯಮ ಇಲಾಖೆಯ ಮಯೂರ ಭುವನೇಶ್ವರಿ ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿದರು. ಶನಿವಾರ ಸಂಜೆ ಹೋಟೆಲ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಭಾನುವಾರ ಬೆಳಿಗ್ಗೆ ವಾಯುಸೇನೆಯ ಹೆಲಿಕ್ಯಾಪ್ಟರ್ ನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪಯಣ ಬೆಳೆಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.