ಹೊಸಪೇಟೆ (ವಿಜಯನಗರ): ಪೌರ ವೃಂದದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸಹಿತ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯನನಗರ ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಹೊಸಪೇಟೆ ನಗರ, ಕಮಲಾಪುರ, ಮರಿಯಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಹಾಗೂ ಹರಪನಹಳ್ಳಿಗಳಲ್ಲಿ ಕಸ ವಿಲೇವಾರಿ ಸಂಪೂರ್ಣ ಸ್ಥಗಿತಗೊಂಡಿದ್ದು, ರಸ್ತೆ ಬದಿಗಳಲ್ಲಿ ರಾಶಿ ಬಿದ್ದಿರುವ ಕಸ ಗೊಬ್ಬರದ ಗುಂಡಿಗಳಂತೆ ಕಾಣಿಸುತ್ತಿವೆ.
ಮಾತುಕತೆ ವಿಫಲ:
‘ಗುರುವಾರ ಬೆಂಗಳೂರಿನಲ್ಲಿ ಪೌರಾಡಳಿತ ಇಲಾಖೆ ಕಾರ್ಯದರ್ಶಿ ಅವರು ನಮ್ಮ ಸಂಘದ ಮುಖಂಡರ ಜತೆಗೆ ಮಾತುಕತೆ ನಡೆಸಿದ್ದರು. ಒಂದು ತಿಂಗಳ ಕಾಲಾವಕಾಶ ನೀಡಲು ಕೇಳಿಕೊಂಡರು. ಅದಕ್ಕೆ ನಾವು ಒಪ್ಪಿಕೊಂಡಿಲ್ಲ. ಹೀಗಾಗಿ ಮಾತುಕತೆ ಮುರಿದುಬಿದ್ದಿದೆ. ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಅವರು ಮಾತುಕತೆಗೆ ಆಹ್ವಾನಿಸಿದ್ದಾರೆ, ಏನು ನಿರ್ಧಾರ ಆಗುತ್ತದೋ ಕಾಯಲಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಹೊಸಪೇಟೆ ಶಾಖೆಯ ಅಧ್ಯಕ್ಷ ಬಿ.ಎಂ.ನಾಗೇಂದ್ರ ವರ್ಮಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.