ADVERTISEMENT

ವಿಜಯನಗರ: ‘ಕೋವಿಡ್‌ನಿಂದ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ'

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 12:23 IST
Last Updated 11 ನವೆಂಬರ್ 2021, 12:23 IST
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಆರನೇ ಸಮ್ಮೇಳನದ ಪ್ರಯುಕ್ತ ಗುರುವಾರ ಹೊಸಪೇಟೆಯಲ್ಲಿ ರ್‍ಯಾಲಿ ನಡೆಸಿದರು
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಆರನೇ ಸಮ್ಮೇಳನದ ಪ್ರಯುಕ್ತ ಗುರುವಾರ ಹೊಸಪೇಟೆಯಲ್ಲಿ ರ್‍ಯಾಲಿ ನಡೆಸಿದರು   

ಹೊಸಪೇಟೆ (ವಿಜಯನಗರ): ‘ಕೋವಿಡ್‌ನಿಂದ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಏರಿಕೆಯಾಗಿದೆ’ ಎಂದು ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದರು.

ನಗರದ ಗೌತಮ ಬುದ್ಧ ಹಾಲ್‌ನಲ್ಲಿ ಗುರುವಾರ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ 6ನೇ ಸಮ್ಮೆಳನದಲ್ಲಿ ಮಾತನಾಡಿದ ಅವರು, ‘ಕೋವಿಡ್‌ನಿಂದ ಅನೇಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಲಕ್ಷಾಂತರ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಿಲ್ಲ’ ಎಂದು ಟೀಕಿಸಿದರು.

‘ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಲಕ್ಷಾಂತರ ಕಟ್ಟಡ ಕಾರ್ಮಿಕರಿಗೆ ಸಂಘಟನೆ ನೆರವು ನೀಡಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಗಲು ರಾತ್ರಿ ಶ್ರಮಿಸಿದ್ದಾರೆ. ಇವರ ಶ್ರಮದಿಂದ ಸಾವಿರಾರು ಕಾರ್ಮಿಕರು ಹಸಿವಿನ ದವಡೆಯಿಂದ ಪಾರಾಗಿದ್ದಾರೆ. ಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ಸಿಗುತ್ತಿಲ್ಲ. ಕಾರ್ಮಿಕ ಕಲ್ಯಾಣ ಮಂಡಳಿ ಹಂತ ಹಂತವಾಗಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಜಿಲ್ಲಾ ಉಪವಿಭಾಗ ಕಾರ್ಮಿಕ ಅಧಿಕಾರಿ ಅಲ್ತಾಫ್ ಮಾತನಾಡಿ, ‘ಬಳ್ಳಾರಿ ಮತ್ತು ಹೊಸಪೇಟೆ ಭಾಗದಲ್ಲಿ ಇಲಾಖೆ ವತಿಯಿಂದ ಸಾವಿರಾರು ರೇಷನ್ ಕಿಟ್ ಹಾಗೂ ಇತರೆ ಉಪಯುಕ್ತ ಸಾಮಗ್ರಿಗಳನ್ನು ವಿತರಿಸಲಾಗಿದೆ. ತಾಂತ್ರಿಕ ಕಾರಣದಿಂದ ನೂರಾರು ಅರ್ಜಿಗಳ ವಿಲೆವಾರಿಯಾಗಿಲ್ಲ. ಆದಷ್ಟು ಬೇಗ ಇತ್ಯರ್ಥಪಡಿಸಿ ಕಾರ್ಮಿಕರಿಗೆ ಪರಿಹಾರ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದಲ್ಲಿ ರ್‍ಯಾಲಿ ನಡೆಸಿದರು. ಕಾರ್ಮಿಕ ಅಧಿಕಾರಿ ಮಾರಿಕಾಂಬ, ಕಾರ್ಮಿಕ ಇಲಾಖೆಯ ಇನ್‌ಸ್ಪೆಕ್ಟರ್‌ ಭೂಪಾಲ್, ಅಶೋಕ್, ಸಿಐಟಿಯು ಜಿಲ್ಲಾ ಅಧ್ಯಕ್ಷ ಭಾಸ್ಕರ್‌ ರೆಡ್ಡಿ, ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ, ಫೆಡರೇಷನ್‌ ಜಿಲ್ಲಾ ಅಧ್ಯಕ್ಷ ಎನ್‌. ಯಲ್ಲಾಲಿಂಗ, ಮುಖಂಡರಾದ ವಿರುಪಾಕ್ಷ, ರಾಘವೇಂದ್ರ, ಎಂ‌.ಗೋಪಾಲ, ರಾಮಾಂಜಿ, ವಿ. ಸ್ವಾಮಿ, ಎಲ್.ಮಂಜುನಾಥ್, ಪ್ರಕಾಶ್, ಭೀಯಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.