ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಹೈಕಮಾಂಡ್, ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ತಾಲ್ಲೂಕಿನ ನಂದಿಪುರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 'ಬಿಜೆಪಿ ಅಧ್ಯಕ್ಷರನ್ನು ಬದಲಿಸುವುದಾದರೆ ನನಗೆ ಅವಕಾಶ ನೀಡುವಂತೆ ಹೈಕಮಾಂಡ್ ಬಳಿ ವಿನಂತಿಸಿಕೊಂಡಿದ್ದೇನೆ, ಅಂತಿಮವಾಗಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ’ ಎಂದರು.
ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಅವರೊಂದಿಗೆ ಅಸಮಾಧಾನಿತರೆಲ್ಲಾ ಮಾತುಕತೆ ನಡೆಸಿದ್ದಾರೆ, ಎಲ್ಲ ಬಗೆಹರಿಯುವ ವಿಶ್ವಾಸವಿದೆ ಎಂದರು.
ಶಾಸಕ ಜನಾರ್ದನ ರೆಡ್ಡಿ ಅವರೊಂದಿಗೆ ಮತ್ತೆ ಒಂದಾಗಲು ಸಾಧ್ಯವಿಲ್ಲ, ಬೇರೆ ವಿಷಯಗಳಾಗಿದ್ದರೆ ಸಂಧಾನವಾಗಬಹುದಿತ್ತೇನೊ, ಇದು ಬೇರೆ ಏನೋ ಇದೆ ಎಂದರು.
ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲುವು ಸಾಧಿಸುತ್ತೇನೆ, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನೆಗಾಗಿ ಪ್ರವಾಸ ಮಾಡುತ್ತಿದ್ದೇನೆ, ಕೂಡ್ಲಿಗಿಯಲ್ಲಿ ಸ್ಪರ್ಧಿಸುವ ಕುರಿತು ಮುಂದೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
'ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವಂತೆ ಡಿ.ಕೆ. ಶಿವಕುಮಾರ್ ಆದಿಯಾಗಿ ಎಲ್ಲರೂ ಪ್ರಯತ್ನಿಸಿದ್ದಾರೆ, ನಾನು ರಾಷ್ಟ್ರೀಯ ಪಕ್ಷದಲ್ಲಿದ್ದೇನೆ, ಅನ್ಯ ಪಕ್ಷ ಸೇರುವುದಿಲ್ಲ, ಮುಂದಿನ ದಿನಗಳಲ್ಲಿ ರಾಜ್ಯದಲ್ಲೆಡೆ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ, 160 ಸ್ಥಾನಗಳನ್ನು ಗೆಲ್ಲಿಸಲಿದ್ದೇನೆ'ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಕೆ.ನೇಮರಾಜನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.