ವಿಜಾಪುರ: ಇದೇ 15ರಿಂದ ಆರಂಭಗೊಳ್ಳಲಿರುವ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 24,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 35 ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ತೆರೆಯಲಾಗಿದೆ. ಈ ಪೈಕಿ 8 ಸೂಕ್ಷ್ಮ, 6 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ.
`ಈ ಬಾರಿ ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಅಕ್ರಮಗಳು ನಡೆದರೆ, ಅಕ್ರಮದಲ್ಲಿ ತೊಡಗಿದ ವಿದ್ಯಾರ್ಥಿಯ ಜೊತೆಗೆ ಕೊಠಡಿ ಮೇಲ್ವಿಚಾರಕರು, ಉಸ್ತುವಾರಿ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಅಕ್ರಮ ನಡೆದ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು~ ಎಂದು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಎಚ್ಚರಿಸಿದ್ದಾರೆ.ಪರೀಕ್ಷೆಯ ಪೂರ್ವ ಸಿದ್ಧತೆಯ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಎಲ್ಲ 35 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸಮಪರ್ಕವಾಗಿ ಪೀಠೋಪಕರಣ ವ್ಯವಸ್ಥೆ ಮಾಡಬೇಕು.
ಯಾವುದೇ ಕಾರಣಕ್ಕೂ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಿಸಬಾರದು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯದಲ್ಲಿ ಏರು-ಪೇರಾದರೆ ಚಿಕಿತ್ಸೆ ನೀಡಲು ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಿದರು.
ಪರೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಪರೀಕ್ಷಾರ್ಥಿಗಳ ಜೊತೆಗೆ ಪೋಷಕರು, ಕೇಂದ್ರ ಹಾಗೂ ಕೊಠಡಿಯೊಳಗೆ ಬರುವುದನ್ನು ತಡೆಯಬೇಕು.
ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ಕಾವಲಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸಾಗಿಸಬೇಕು. ಪ್ರಶ್ನೆ ಪತ್ರಿಕೆ ಬಂಡಲ್ಗಳನ್ನು ಕಡ್ಡಾಯವಾಗಿ ವಿದ್ಯಾರ್ಥಿಗಳ ಸಮ್ಮುಖದಲ್ಲಿಯೇ ತೆರೆಯಬೇಕು ಎಂದು ಸೂಚಿಸಿದರು.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ. ಜಿಲ್ಲೆಯ ಎಲ್ಲ 35 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ಸಮಯದಲ್ಲಿ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದು ಹಾಗೂ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡಿಸುವ ಕುರಿತಂತೆ ಕ್ರಮಕೈಗೊಳ್ಳಲು ನಿರ್ಧರಿಸಲಾಯಿತು.
ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರಿಕರಣ ಮಾಡಲು ನಿರ್ಧರಿಸಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳ ಜಾಗೃತ ದಳ ರಚಿಸಿ, ಅನಿರೀಕ್ಷಿತ ತಪಾಸಣೆ ನಡೆಸಲು ತೀರ್ಮಾನಿಸಲಾಯಿತು.
ಈಗಾಗಲೇ ಜಾಗೃತ ದಳಕ್ಕೆ 107 ಜನರನ್ನು ನಿಯೋಜಿಸಿದ್ದು, ಏಳು ತಂಡಗಳನ್ನು ರಚಿಸಲಾಗಿದೆ.
ಇದಲ್ಲದೇ ಜಿಲ್ಲಾ ಮಟ್ಟದ ಜಾಗೃತ ದಳ, ತಾಲ್ಲೂಕು ಮಟ್ಟದ ಜಾಗೃತ ದಳ ಹಾಗೂ ಕೇಂದ್ರವಾರು ಜಾಗೃತ ದಳವನ್ನು ನಿಯೋಜಿಸಲಾಗಿದೆ ಎಂದು ಪಿಯು ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಚೌರ್ ವಿವರಿಸಿದರು.
ಪಿಯುಸಿ ಪರೀಕ್ಷೆಯ ಬೆನ್ನಲ್ಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಯೂ ಆರಂಭಗೊಳ್ಳಲಿರುವುದರಿಂದ ವಿದ್ಯಾರ್ಥಿಗಳಿಗೆ ಓದಲು ಅನುಕೂಲ ಮಾಡಿಕೊಡಲು, ರಾತ್ರಿ 10ರ ನಂತರ ಸಾರ್ವಜನಿಕವಾಗಿ ಸೌಂಡ್ ಸಿಸ್ಟಮ್ ಮೂಲಕ ಶಬ್ದ ಮಾಲಿನ್ಯ ಮಾಡುವುದನ್ನು ನಿರ್ಬಂಧಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
35 ಕೇಂದ್ರ: ವಿಜಾಪುರ ನಗರದಲ್ಲಿ 12, ವಿಜಾಪುರ ತಾಲ್ಲೂಕಿನಲ್ಲಿ 3, ಸಿಂದಗಿ ತಾಲ್ಲೂಕಿನಲ್ಲಿ 5, ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ 5, ಇಂಡಿ ತಾಲ್ಲೂಕಿನಲ್ಲಿ 7, ಮುದ್ದೇಬಿಹಾಳ ತಾಲ್ಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಪರೀಕ್ಷಾರ್ಥಿಗಳು: ಪ್ರಥಮ ಬಾರಿಗೆ 16,160 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದು, ಖಾಸಗಿಯಾಗಿ 1,344 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 7,228 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್.ಎ. ಟ್ರಾಸ್ಗರ್, ಉಪ ವಿಭಾಗಾಧಿಕಾರಿ ಸುರೇಶ ಜಿರಲಿ, ಬಸವನ ಬಾಗೇವಾಡಿ ತಹಶೀಲ್ದಾರ ಮಹಾದೇವ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಕೀಂ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಪ್ರಾಚಾರ್ಯರು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.