ವಿಜಾಪುರ: ಇಲ್ಲಿಯ ನವರಸಪುರ ಉತ್ಸವವನ್ನು ಮೇ 20ರಿಂದ 22ರ ವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆ ಯಲ್ಲಿ ಸೋಮವಾರ ಇಲ್ಲಿ ನಡೆದ ಉತ್ಸವ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ನವರಸಪುರ ಉತ್ಸವಕ್ಕೆ ಈ ವರ್ಷ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಹಿಂದಿನ ವರ್ಷದ 17 ಲಕ್ಷ ರೂಪಾಯಿ ಜಿಲ್ಲಾ ಆಡಳಿತದ ಬಳಿ ಇದ್ದು, 67 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಉತ್ಸವ ವನ್ನು ಅದ್ದೂರಿಯಾಗಿ ಆಚರಿಸಲಾಗು ವುದು. ರಾಷ್ಟ್ರಮಟ್ಟದ ಕಲಾವಿದರಿಗೆ ತಗಲುವ ವೆಚ್ಚವನ್ನು ಇಲಾಖೆ ಪ್ರತ್ಯೇಕವಾಗಿ ಭರಿಸಲಿದೆ ಎಂದು ಸಚಿವ ಕಾರಜೋಳ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರ ಸಲಹೆಯ ಮೇರೆಗೆ ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವ ಸುಬೋಧ್ ಕಾಂತ ಸಹಾಯ್ ಅವರನ್ನು ಉತ್ಸವದ ಉದ್ಘಾಟನೆಗೆ ಆಹ್ವಾನಿಸಲು ನಿರ್ಧರಿಸ ಲಾಯಿತು.
ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲು ಹಾಗೂ ಕುಸ್ತಿ ಪಂದ್ಯ ಹಮ್ಮಿಕೊಳ್ಳಲು ಹಾಗೂ ಪ್ರತಿ ವರ್ಷ ಜನವರಿ 2ರಿಂದ 4ರ ವರೆಗೆ ನವರಸಪುರ ಉತ್ಸವವನ್ನು ನಿಯಮಿತವಾಗಿ ಆಚರಿಸಲು ಸಭೆ ನಿರ್ಧರಿಸಿತು.
ಉತ್ಸವಕ್ಕೆ ಪ್ರತಿ ವರ್ಷವೂ ಕನಿಷ್ಠ 50 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿದರು.
ಶಾಸಕರಾದ ಎಂ.ಬಿ. ಪಾಟೀಲ, ಅಪ್ಪು ಪಟ್ಟಣಶೆಟ್ಟಿ, ವಿಠ್ಠಲ ಕಟಕ ಧೋಂಡ, ಜಿ.ಪಂ. ಅಧ್ಯಕ್ಷೆ ಶಂಕ್ರುಬಾಯಿ ಚಲವಾದಿ, ಉಪಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣ ಶೆಟ್ಟಿ, ಜಿ.ಪಂ. ಸಿಇಒ ಎ.ಎನ್. ಪಾಟೀಲ, ಎಸ್ಪಿ ಡಾ.ಡಿ.ಸಿ. ರಾಜಪ್ಪ ಹಾಗೂ ಉತ್ಸವ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.