ADVERTISEMENT

ಸಂರಕ್ಷಣಾ ಕಾಯ್ದೆ ವರದಾನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2011, 10:05 IST
Last Updated 21 ಮಾರ್ಚ್ 2011, 10:05 IST

ವಿಜಾಪುರ: ಕೌಟುಂಬಿಕ ಹಿಂಸೆ ತಡೆಗೆ ಮಹಿಳಾ ಸಂರಕ್ಷಣಾ ಕಾಯ್ದೆ ಒಂದು ವರದಾನವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಮತ್ತು ಜಿಲ್ಲಾ ಸೇಷನ್ಸ್ ನ್ಯಾಯಾಧೀಶ ಎಲ್. ಸುಬ್ರ್ರಹ್ಮಣ್ಯ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ಇಲ್ಲಿ ಹಮ್ಮಿಕೊಂಡಿರುವ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರನ್ನು ಕೌಟುಂಬಿಕ ಹಿಂಸೆಯಿಂದ ಪಾರುಮಾಡಲು ಮಹಿಳೆಯರ ಸಂರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಪ್ರಮುಖ ಜವಾಬ್ದಾರಿ ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೇಲಿದೆ. ಸ್ವಯಂ ಪ್ರೇರಿತರಾಗಿ ಜವಾಬ್ದಾರಿಯಿಂದ ಕಾಯ್ದೆಯ ಅನುಷ್ಠಾನ ಕುರಿತಂತೆ ಕಾಳಜಿ ವಹಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಿ.ಪಿ. ವಸಂತಪ್ರೇಮಾ ಮಾತನಾಡಿ, ಒಂದಿಲ್ಲೊಂದು ಕಾರಣಕ್ಕೆ ಬಹುಪಾಲು ಮಹಿಳೆಯರು ನಿತ್ಯ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಮಹಿಳೆಯರು ಜಾಗೃತರಾಗಬೇಕು. ಮಹಿಳಾ ಸಂರಕ್ಷಣಾ ಕಾಯ್ದೆಯ ಉಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಧೀಶ ಎಂ. ರಾಮಚಂದ್ರ, ನ್ಯಾಯಾಧೀಶೆ ಅರುಣಾ ಕುಮಾರಿ, ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗನ್ನಾಥ್ ಮಾತನಾಡಿದರು.ಅಪರ ಜಿಲ್ಲಾಧಿಕಾರಿ ಜಿ.ಎಸ್. ಜಿದ್ದಿಮನಿ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಎಸ್. ಟಿ. ತಳವಾರ ಸ್ವಾಗತಿಸಿದರು. ಮಧು ಕೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.