ವಿಜಾಪುರ: ‘ಕ್ರೀಡೆಯು ವೈಯಕ್ತಿಕವಾಗಿ ಸಾಧನೆಗೆ ಅವಕಾಶ ಒದಗಿಸುವುದರ ಜೊತೆಯಲ್ಲಿ ಆರೋಗ್ಯ ಭಾಗ್ಯವನ್ನೂ ಕರುಣಿಸುತ್ತದೆ. ಹೀಗಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರತಿಯೊಬ್ಬರೂ ಮನಸ್ಸು ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಾಪುಗೌಡ ಪಾಟೀಲ ಸಲಹೆ ನೀಡಿದರು.
ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಅಂಗವಿಕಲರ ಒಕ್ಕೂಟದ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಅಂಗವಿಕಲರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಂಗವಿಕಲರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದ ಅವರು ಕ್ರೀಡಾ ಚಟುವಟಿಕೆಗಳಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಎಲ್ಲ ಬಗೆಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಾವೇದ್ ಜಮಾದಾರ ಮಾತನಾಡಿ, ಅಂಗವಿಕಲರು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ
ಸಮಾಜಕ್ಕೆ ಮಾದರಿಯಾಗಿದ್ದಾರೆ, ಸಂಕುಚಿತ ಭಾವನೆಯಿಂದ ಹೊರಬಂದು ಹಕ್ಕುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ ಕೋಳಕೂರ ಕ್ರೀಡಾಕೂಟ ಉದ್ಘಾಟಿಸಿದರು. ಎಂ.ಎಸ್.ಖೇಡ, ಪರಶುರಾಮ ಗುನ್ನಾಪುರ, ಮಾರಿಯಪ್ಪ ಮತ್ತಿತರರು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ನಿಂಗಪ್ಪ, ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಸಲಹಾ ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ್, ನಾಗರಾಜ ಲಂಬು, ಸಂಜೀವಖೋತ ಮತ್ತಿತರರು ಉಪಸ್ಥಿತರಿದ್ದರು. ವಿ.ಜಿ.ಉಪಾಧ್ಯೆ ಸ್ವಾಗತಿಸಿದರು. ಆರ್.ಬಿ.ಉಪಾಸೆ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.