ADVERTISEMENT

100 ರೈತ ಸಂಪರ್ಕ ಕೇಂದ್ರ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 1 ಮೇ 2012, 5:50 IST
Last Updated 1 ಮೇ 2012, 5:50 IST

ಸಿಂದಗಿ: ರಾಜ್ಯ ಸರ್ಕಾರ ಪ್ರಸ್ತುತ ಬಜೆಟ್‌ನಲ್ಲಿ 100 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯ ಹಣ ತೆಗೆದಿರಿಸಲಾಗಿದೆ. ಕಳೆದ ಬಜೆಟ್‌ನಲ್ಲೂ ಕೂಡ 100 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣ ಮಾಡಲಾಗಿತ್ತು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.

ಸೋಮವಾರ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ರೂ.25ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಿಂದಗಿ ಹೋಬಳಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನ ಆಲಮೇಲ ಹೋಬಳಿಯಲ್ಲೂ ನೂತನ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ಭರವಸೆ ನೀಡಿದರು. ರೈತರಿಗಾಗಿ ಸರ್ಕಾರ ಅನುಷ್ಠಾನದಲ್ಲಿ ತರುತ್ತಿರುವ ಹಲವಾರು ಕೃಷಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೈತರಲ್ಲಿ ಮನವಿ ಮಾಡಿಕೊಂಡರು.

ಬಿಜೆಪಿ ಸರ್ಕಾರದಲ್ಲಿ ಆಂತರಿಕ ಜಗಳ ಇ್ದ್ದದದ್ದು ಸತ್ಯ ಇದು ತಮಗೂ ನೋವು ತರಿಸಿದೆ. ಆದರೆ ರಾಜ್ಯದ ಅಭಿವೃದ್ದಿಯಲ್ಲಿ ಬಿಜೆಪಿ ಸರ್ಕಾರ ಅಗಾಧ ಮುನ್ನಡೆ ಸಾಧಿಸಿದೆ ಎಂಬುದು ಕೂಡ ಅಷ್ಟೇ ಸತ್ಯ ಎಂದರು.

ಸಿಂದಗಿ ಮತಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ದಿಗಾಗಿ ರೂ.20ಕೋಟಿ ಬಿಡುಗಡೆಯಾಗಿದೆ. ರೂ.1.80ಕೋಟಿ ವೆಚ್ಚದಲ್ಲಿ ನಂದಗೇರಿ ಸೇತುವೆ, ರೂ.1.20ಕೋಟಿ ವೆಚ್ಚದಲ್ಲಿ ಮುರಡಿ ಸೇತುವೆ ನಿರ್ಮಾಣಕ್ಕಾಗಿ ಮಂಜೂರಾತಿ ದೊರಕಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಮಾತನಾಡಿ, ಸಮಾಜದ ಸಾಮಾನ್ಯ, ಕೊನೆ ರೈತರಿಗೆ ಸರ್ಕಾರದ ಯೋಜನೆ ಗಳು ತಲುಪುವುದು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ರೈತರ ಏನೆಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ಅಧಿಕಾರಿಗಳ ಸಂಖ್ಯೆ ತೀರ ಕಡಿಮೆ. ಆದರೆ ರೈತರು ಸರ್ಕಾರದ ಯೋಜನೆ ಗಳ ಸದುಪಯೋಗ ಪಡೆದುಕೊಳ್ಳ ಬೇಕಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಿನ ಸದ್ಬಳಕೆ ಆಗುತ್ತಿಲ್ಲ. ಈ ಯೋಜನೆಯಡಿ ಈ ಭಾಗದಲ್ಲಿ ರೈತರು ಕಬ್ಬು ಬೆಳೆ ಬೆಳೆಯಬಾರದು ಎಂಬ ಕಟ್ಟುನಿಟ್ಟಿನ ನಿಯಮಾವಳಿ ಇದ್ದಾಗ್ಯೂ ಅದನ್ನು ರೈತರು ಅನುಸರಿಸದೇ ಇದ್ದುದರಿಂದ ಎಲ್ಲೆಡೆ ನೀರಿಗಾಗಿ ಹಾಹಾಕಾರ ಉಂಟಾಗುತ್ತಲಿದೆ. ಹೀಗಾಗಿ ರೈತರು ಭವಿಷ್ಯದಲ್ಲಿ ಕಬ್ಬು ಬೆಳೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಕುರಿತು ಕೃಷಿ ಇಲಾಖೆಯಿಂದ ರೈತರಿಗೆ ತಿಳುವಳಿಕೆ ಮೂಡಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಜಿಪಂ ಸದಸ್ಯ ಮಲ್ಲಪ್ಪ ತೋಡಕರ, ತಾಪಂ ಉಪಾಧ್ಯಕ್ಷ ಸಿದ್ದನಗೌಡ ಹರನಾಳ, ಎ.ಪಿ.ಎಂ.ಸಿ ಅಧ್ಯಕ್ಷ ಎಂ.ಎಸ್.ಮಠ, ಉಪಾಧ್ಯಕ್ಷ ಶರಣಪ್ಪ ಧರಿ, ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಉಪಸ್ಥಿತರಿದ್ದರು.

ಕೃಷಿ ಸಹಾಯಕ ನಿರ್ದೇಶಕ ಎಚ್.ವೈ.ಸಿಂಗೆಗೋಳ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕೃಷಿ ಅಧಿಕಾರಿ ಸುಂಕದ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.