ವಿಜಯಪುರ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಶತಮಾನೋತ್ಸವ ಹಾಗೂ ತಮ್ಮ ಪುತ್ರಿಯ ವಿವಾಹದ ದ್ಯೋತಕವಾಗಿ 101 ಜೋಡಿಯ ಸಾಮೂಹಿಕ ವಿವಾಹ ಶೀಘ್ರದಲ್ಲೇ ಆಯೋಜಿಸುತ್ತಿರುವುದಾಗಿ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.29ರಂದು ತಮ್ಮ ಹಿರಿಯ ಪುತ್ರಿ ಸಂಯುಕ್ತಾ ಪಾಟೀಲ ಅವರ ವಿವಾಹ ಮಹೋತ್ಸವ ನಡೆಯಲಿದೆ. ಅದೇ ದಿನ ಸಾಮೂಹಿಕ ವಿವಾಹ ಏರ್ಪಡಿಸುವ ಉದ್ದೇಶವಿತ್ತು. ಆದರೆ, ಕೋವಿಡ್ ಕಾರಣದಿಂದ ಅನುಮತಿ ಸಿಕ್ಕಿಲ್ಲ ಎಂದರು.
ಶೀಘ್ರದಲ್ಲೇ ಸಾಮೂಹಿಕ ವಿವಾಹ ಏರ್ಪಡಿಸಲು ಸಿದ್ಧತೆ ನಡೆದಿದೆ. ಆರ್ಥಿಕ ಬಿಕ್ಕಟ್ಟಿನಲ್ಲಿರುವ ಬಡ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಮೂಹಿಕ ವಿವಾಹವನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದರು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಲಿಚ್ಛಿಸುವವರು ಹೆಸರು ನೋಂದಾಯಿಸಲು ಅವಕಾಶವಿದೆ. ಇಚ್ಛೆಯುಳ್ಳ ಎಲ್ಲ ಜಾತಿ, ಧರ್ಮದವರೂ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಬಹುದು. ಎಲ್ಲ ಖರ್ಚುವೆಚ್ಚವನ್ನು ತಾವೇ ಭರಿಸುವುದಾಗಿ ಹೇಳಿದರು.
ಸಂಯುಕ್ತಾ ಅವರ ವಿವಾಹ ಕಾರ್ಯಕ್ರಮ ನ.29ರಂದು ಸಂಜೆ 5.30ಕ್ಕೆ ನಗರದ ಬೇಗಂ ತಲಾಬ್ ಬಳಿ ನಡೆಯಲಿದೆ. ಖುದ್ದಾಗಿ ಯಾರಿಗೂ ಆಮಂತ್ರಣ ಪತ್ರಿಕೆ ತಲುಪಿಸಲು ಸಾಧ್ಯವಾಗಿಲ್ಲ. ವಿವಾಹ ಕಾರ್ಯಕ್ರಮಕ್ಕೆ ಹಿತೈಷಿಗಳು, ಸ್ನೇಹಿತರು, ಬೆಂಬಲಿಗರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು.
ಬಿಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತಾ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.