ವಿಜಯಪುರ: ನಗರದ ಯೋಗಾಪುರ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 161 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ನಗರ ವ್ಯಾಪ್ತಿಯಲ್ಲಿ ಪಡಿತರ ಚೀಟಿದಾರರರಿಂದ ಖರೀದಿಸಿದ ಅಕ್ಕಿಯನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ಹೆಚ್ಚಿನ ಲಾಭಕ್ಕಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಉಪನಿರ್ದೇಶಕರ ನೇತೃತ್ವದ ತಂಡವು ಯೋಗಾಪುರದ ಅಬ್ದುಲ್ ಗಫೂರ್ ಶಾ ದರ್ಗಾ ಹತ್ತಿರ ಇರುವ ಪತ್ರಾಸ್ ಶೆಡ್ಡಿನ ಮೇಲೆ ದಾಳಿ ಮಾಡಿದಾಗ ಸುಮಾರು ₹ 3.55 ಲಕ್ಷ ಮೊತ್ತದ 161 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದೆ.
ಅಕ್ರಮ ವ್ಯವಹಾರ ಮಾಡುತ್ತಿರುವ ಗೂಡು ಲಾಲ ತುಬಾಕಿ ಎಂಬ ವ್ಯಕ್ತಿಯ ವಿರುದ್ಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕರು ಪ್ರಕರಣ ದಾಖಲಿಸಿದ್ದಾರೆ.
ಸರ್ಕಾರವು ಪಡಿತರ ಚೀಟಿದಾರರಿಗೆ ನೀಡಲಾಗುವ ಅಕ್ಕಿಯನ್ನು ಮಾರಾಟ ಮಾಡುವುದು ಅಪರಾಧವಾಗಿದ್ದು, ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುವ ಉಚಿತ ಅಕ್ಕಿಯನ್ನು ಬೇರೆ ಯಾರಿಗೂ ಕಾಳಸಂತೆಯಲ್ಲಿ ಮಾರಾಟ ಮಾಡದೆ ಸ್ವಂತಕ್ಕೆ ಮಾತ್ರ ಉಪಯೋಗಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.