ADVERTISEMENT

ತಬ್ಲೀಗ್ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 17 ಮಂದಿ ಪತ್ತೆ            

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 10:54 IST
Last Updated 2 ಏಪ್ರಿಲ್ 2020, 10:54 IST
ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು    

ವಿಜಯಪುರ: ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲೀಗ್ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ವಿಜಯಪುರ, ಬಸವನ ಬಾಗೇವಾಡಿ ಮತ್ತು ಮುದ್ದೇಬಿಹಾಳದ 17 ಜನರನ್ನು ಇಂದು ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಿನ್ನೆ ದಿನ 10 ಜನರನ್ನು ಪತ್ತೆ ಹಚ್ಚಲಾಗಿತ್ತು. ಇಂದು 17 ಜನ ಸೇರಿದಂತೆ ಒಟ್ಟು 27 ಜನರನ್ನು ಇದುವರೆಗೆ ಪತ್ತೆ ಹಚ್ಚಲಾಗಿದೆ. ಆರೋಗ್ಯ ಇಲಾಖೆ ಮತ್ತು ಪೊಲೀಸರ ಇಲಾಖೆ ಸಹಕಾರದೊಂದಿಗೆ ಪತ್ತೆ ಕಾರ್ಯ ಮುಂದುವರಿದಿದ್ದು ಈ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದರು.

ಇವರೆಲ್ಲರೂ ಮಾರ್ಚ್ 4 ಮತ್ತು 5 ರಂದು ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ಮಾರ್ಚ್ 8ರಂದು ವಿಜಯಪುರಕ್ಕೆ ಮರಳಿದ್ದಾರೆ. ಈಗಾಗಲೇ ಇವರ ಕ್ವಾರಂಟೈನ್ ಅವಧಿ ಮುಗಿದಿದೆ. ಆದರೂ ಸಹ ಏಪ್ರಿಲ್ 14ರ ವರಗೆ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗುವುದು ಹಾಗೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಎಂದರು.

ADVERTISEMENT

ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದರು. ಜಿಲ್ಲೆಯ ಘೋಷಿತ ಮತ್ತು ಅಘೋಷಿತ ಕೊಳೆಗೇರಿಗಳಲ್ಲಿರುವ ಸುಮಾರು 60 ಸಾವಿರ ಜನರಿಗೆ ನಾಳೆಯಿಂದ ಉಚಿತವಾಗಿ ಹಾಲು ವಿತರಣೆ ಮಾಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.